
ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಮತ್ತು ಸ್ಥಳೀಯ ಎಲ್ಲ ಬಿಲ್ಲವ ಸಂಘಗಳ ಸಹಕಾರದೊಂದಿಗೆ ‘ಗುರು ಸಾಮರಸ್ಯ ಸಂದೇಶ ಜಾಥಾ’ ವನ್ನು ಆಯೋಜಿಸಲಾಗಿದೆ. ಈ ಜಾಥಾವು ಸೆಪ್ಟೆಂಬರ್ 21, 2025ರ ರವಿವಾರದಂದು ಮಧ್ಯಾಹ್ನ 2:00 ಗಂಟೆಗೆ ಉಡುಪಿಯ ಬನ್ನಂಜೆಯಲ್ಲಿರುವ ಬಿಲ್ಲವರ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ ಭಾಗವಹಿಸಲಿದ್ದಾರೆ. ಜೊತೆಗೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮತ್ತು ಇತರ ಗಣ್ಯರೂ ಉಪಸ್ಥಿತರಿರಲಿದ್ದಾರೆ.

ಬೆಂಗಳೂರು ಸಹಾಯಕ ಪೊಲೀಸ್ ಆಯುಕ್ತರಾದ ರೀನಾ ಸುವರ್ಣ ಮತ್ತು ದೈವ ನರ್ತಕರಾದ ರವಿ ಪಾಣಾರ ಪಡ್ಡಂ ಅವರು ಈ ಗುರು ಸಾಮರಸ್ಯ ಸಂದೇಶ ಜಾಥಾ ರಥಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಜಿಲ್ಲಾಧ್ಯಕ್ಷರಾದ ಪ್ರವೀಣ್ ಎಂ. ಪೂಜಾರಿ ವಹಿಸಲಿದ್ದಾರೆ.
ಸಂಘಟನೆಯ ಅಧ್ಯಕ್ಷರು, ಗೌರವ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಈ ಕಾರ್ಯಕ್ರಮಕ್ಕೆ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.



































