
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಜೂನ್ 8) ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಭೇಟಿಯು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಹೆಚ್ಚಿನ ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಪ್ರವಾಸ ರಾಜ್ಯದ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಆದರೆ ಶಾ ಅವರ ಈ ಭೇಟಿ ನೇರವಾಗಿ ಯಾವುದೇ ಅಧಿಕೃತ ಅಥವಾ ರಾಜಕೀಯ ಕಾರ್ಯಕ್ರಮಗಳಿಗಾಗಿ ಅಲ್ಲ. ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮೊಮ್ಮಗನ ಮದುವೆ ನಿಶ್ಚಯವಾದ ಹಿನ್ನೆಲೆಯಲ್ಲಿ ಅವರು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಅಮಿತ್ ಶಾ ನಾಳೆ ರಾತ್ರಿ ಬೆಂಗಳೂರಿಗೆ ಬಂದು, ಜೂನ್ 9ರ ಬೆಳಗ್ಗೆ ನಡೆಯುವ ಮದುವೆ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಬಿಗುವಿನ ಭದ್ರತೆ ಮತ್ತು ನಿರೀಕ್ಷೆಯ ವಾತಾವರಣ ಬೆಂಗಳೂರಿನಲ್ಲಿ ನಿರ್ಮಾಣವಾಗಿದೆ.
ಅಮಿತ್ ಶಾ ಅವರ ಈ ಭೇಟಿಯಿಂದ ರಾಜ್ಯ ರಾಜಕೀಯದಲ್ಲಿ ಇನ್ನೊಂದು ಮಹತ್ವದ ತೀರ್ಮಾನ ಅಥವಾ ರಾಜಕೀಯ ಬೆಳವಣಿಗೆಗೆ ಕಾರಣರಾಗಬಹುದೆಂಬ ಊಹಾಪೋಹಗಳು ನಡೆಯುತ್ತಿವೆ.