
ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ವಿಶ್ವವಾಣಿ ಪತ್ರಿಕೆಯು ನೀಡುವ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್’ಕ್ಕೆ ಈ ಬಾರಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಈ ಗೌರವ ಸ್ವೀಕರಿಸಲಿದ್ದಾರೆ.
2013ರಿಂದ 2018ರವರೆಗೆ ಉಡುಪಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ ಅವರು, 2016ರಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಮತ್ತು ಮೀನುಗಾರಿಕಾ ಇಲಾಖೆಯ ಸಚಿವರಾಗಿದ್ದರು. ಉಡುಪಿಯ ಅಭಿವೃದ್ಧಿಗಾಗಿ ಶ್ರಮಿಸಿದ ಪ್ರಮೋದ್ ಮಧ್ವರಾಜ್ ರಾಜಕೀಯದ ಜೊತೆಗೆ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ ನಿಪುಣತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಾಜದ ಹಿತದೃಷ್ಟಿಯಿಂದ ನೊಂದವರಿಗೆ ಆಶಾಕಿರಣವಾಗಿರುವ ಅವರು ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.