
ಬಾಗಲಕೋಟೆ: ನಗರದಲ್ಲಿ ಗುರುವಾರ ರಾತ್ರಿ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಕಿಡಿಗೇಡಿಗಳು ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿದ್ಧಾರ್ಥ ಗೋಯಲ್ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಬಾಗಲಕೋಟೆಯ ಅಂಬಾಭವಾನಿ ದೇವಾಲಯದಿಂದ ಆರಂಭವಾದ ಶಿವಾಜಿ ಜಯಂತಿಯ ಭವ್ಯ ಶೋಭಾಯಾತ್ರೆಯು ಎಂಜಿ ರಸ್ತೆಯ ಮೂಲಕ ಸಾಗುತ್ತಿತ್ತು. ಮೆರವಣಿಗೆಯು ಫಂಕಾ ಮಸೀದಿಯ ಮುಂಭಾಗಕ್ಕೆ ಬಂದಾಗ, ‘ಬನಾಯೇಂಗೇ ಮಂದಿರ’ ಎಂಬ ಹಾಡು ಮೊಳಗಿದೆ. ಈ ವೇಳೆ ಮೆರವಣಿಗೆಯಲ್ಲಿದ್ದ ಯುವಕರು ನೃತ್ಯ ಮಾಡುತ್ತಿದ್ದಾಗ, ಒಂದು ಕೋಮಿನ ಕಿಡಿಗೇಡಿಗಳು ಮಸೀದಿಯ ಒಳಗಿನಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಗಲಾಟೆ ಆರಂಭಿಸಿದ್ದಾರೆ. ವಾಗ್ವಾದ ವಿಕೋಪಕ್ಕೆ ತಿರುಗುತ್ತಿದ್ದಂತೆ ಮಸೀದಿಯ ಒಳಗಿನಿಂದ ಏಕಾಏಕಿ ಕಲ್ಲು ತೂರಾಟ ನಡೆಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳದಲ್ಲಿದ್ದ ಎಸ್ಪಿ ಸಿದ್ಧಾರ್ಥ ಗೋಯಲ್ ಅವರ ತಲೆಗೆ ನೇರವಾಗಿ ಕಲ್ಲೇಟು ಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿದೆ. ತಲೆಗೆ ಪೆಟ್ಟು ಬಿದ್ದರೂ ಧೃತಿಗೆಡದ ಎಸ್ಪಿ, ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಶಾಂತಿ ಕಾಪಾಡಲು ಶ್ರಮಿಸಿದ್ದಾರೆ.
ಘಟನೆಯ ನಂತರ ಇಡೀ ನಗರದಲ್ಲಿ ಆತಂಕದ ಛಾಯೆ ಆವರಿಸಿದ್ದು, ಹಳೆಯ ಬಾಗಲಕೋಟೆ, ನವನಗರ ಮತ್ತು ವಿದ್ಯಾಗಿರಿ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಕಲ್ಲು ತೂರಾಟ ನಡೆಸಿದ ತನ್ವೀರ್, ಮುಜಾಮಿಲ್, ಸದ್ದಾಂ ಸೇರಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಜಿಲ್ಲಾಡಳಿತವು ಫೆಬ್ರವರಿ 24ರ ವರೆಗೆ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗಾಯಾಳು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.



































