
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಿನ್ನೆಯಷ್ಟೇ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ ನಂತರ, ಜಿಲ್ಲೆ ಭಾರೀ ರಾಜಕೀಯ ಮತ್ತು ಸಾಮಾಜಿಕ ಗದ್ದಲಕ್ಕೆ ದಾರಿ ಮಾಡಿಕೊಡುತ್ತಿದೆ. ಪ್ರಕರಣ ಸಂಬಂಧವಾಗಿ ಮುಸ್ಲಿಂ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ದಕ್ಷಿಣ ಕನ್ನಡದ ಕಾಂಗ್ರೆಸ್ ನಾಯಕರ ಸಾಮೂಹಿಕ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಎಂಬವರು ಮರಳು ಅನ್ ಲೋಡ್ ಮಾಡುವ ಕೆಲಸದಲ್ಲಿ ತೊಡಗಿದ್ದ ವೇಳೆ ಈರಾ ಕೋಡಿಯ ಬಳಿ ದಾಳಿ ನಡೆದಿದ್ದು, ದೀಪಕ್, ಸುಮಿತ್ ಸೇರಿದಂತೆ 15 ಮಂದಿ ದುಷ್ಕರ್ಮಿಗಳು ಪಿಕಪ್ ವಾಹನದ ಮೇಲೆ ದಾಳಿ ಮಾಡಿ, ರಹಿಮಾನ್ ಅವರ ಮೇಲೆ ತಲವಾರು, ಚೂರಿ, ಲೋಹದ ರಾಡ್ಗಳಿಂದ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಮೊಹಮ್ಮದ್ ನಿಸಾರ್ ಅವರ ದೂರಿನ ಮೇರೆಗೆ ಬಂಟ್ವಾಳ ಗ್ರಾಮೀಣ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರಣಾಳಿಕೆಯಿಂದ ಹತ್ಯೆ ನಡೆಸಲಾಗಿದೆ:
ಎಸ್ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಆರೋಪಿಸಿ, ಈ ಪ್ರಕರಣ ಹಿಂದಿನ ಹಿಂಸಾತ್ಮಕ ಭಾಷಣಗಳನ್ನು ಉಲ್ಲೇಖಿಸಿದರು.ಮೊನ್ನೆ ಪ್ರತಿಭಟನೆಯಲ್ಲಿ ಶ್ರೀಕಾಂತ್ ಶೆಟ್ಟಿ ಎಂಬಾತ ರಕ್ತಕ್ಕೆ ರಕ್ತ ಅಂತ ಹೇಳಿದ್ದಾನೆ. ಮತ್ತೊಬ್ಬ ಭರತ್ ಕುಮ್ಡೇಲ್ ಎಂಬ ಗೂಂಡಾ ಪೋಸ್ಟ್ಮಾರ್ಟ್ಂ ಕೂಡ ಮಾಡಲು ಆಗದ ರೀತಿಯಲ್ಲಿ ಕೊಲೆ ಮಾಡುತ್ತೇನೆ ಎಂದು ಹೇಳಿದ್ದನ್ನು ಅವರು ಸ್ಮರಿಸಿದರು.
ಅಬ್ದುಲ್ ರಹಿಮಾನ್ ಹತ್ಯೆಗೆ ಗುಂಡೂರಾವ್ ಖಂಡನೆ :
ಸಚಿವ ಗುಂಡೂರಾವ್ ಖಂಡನೆ ವ್ಯಕ್ತಪಡಿಸಿ , ಪೊಲೀಸರು ಮತ್ತು ಮೇಲ್ಮಟ್ಟದ ಅಧಿಕಾರಿಗಳಿಗೆ ಮಾತನಾಡಿ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದಾರೆ . “ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಿಗಾ ವಹಿಸಿ,” ಎಂದು ಜಿಲ್ಲಾಧಿಕಾರಿ ಮತ್ತು ಎಸ್ಪಿಗಳಿಗೆ ಸೂಚನೆ ನೀಡಿದ್ದಾರೆ.
ಬಿಗಿ ಪೊಲೀಸ್ ಬಂದೋಬಸ್ತ್:
ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಂಡಿದ್ದು, ಕಾನೂನು ಸುವ್ಯವಸ್ಥೆಗಾಗಿ ಎಡಿಜಿಪಿ ಹಿತೇಂದ್ರ ಮಂಗಳೂರಿಗೆ ಆಗಮಿಸಲಿದ್ದಾರೆ. ಮಂಗಳೂರು, ಉಡುಪಿ, ಚಿಕ್ಕಮಗಳೂರು ಸೇರಿದಂತೆ ಹಲವೆಡೆಗಳಿಂದ ಹೆಚ್ಚುವರಿ ಪೊಲೀಸ್ ಪಡೆ ತರಲಾಗುತ್ತಿದೆ. ಶಂಕಾಸ್ಪದ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲಾಗುತ್ತಿದೆ.