
ಬಂಟ್ವಾಳ: ಸುಮಾರು ಐದು ತಿಂಗಳ ಹಿಂದೆ ಚಲಿಸುವ ಬಸ್ನಲ್ಲಿ ಬ್ಯಾಗ್ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ಕಿತ್ತಿದ್ದ ಕುಖ್ಯಾತ ಕಳ್ಳನನ್ನು ಬಂಟ್ವಾಳ ನಗರ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 180 ಗ್ರಾಂ ತೂಕದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ತನಿಖಾ ತಂಡ ಯಶಸ್ವಿಯಾಗಿದೆ.
ಘಟನೆಯ ವಿವರ: ಕಳೆದ 2025ರ ನವೆಂಬರ್ 19 ರಂದು ಬ್ರಹ್ಮಾವರ ಮೂಲದ ದಂಪತಿಗಳು ದುರ್ಗಾಂಬಾ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ಸು ಬಂಟ್ವಾಳದ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿರುವ ‘ಸಮುದ್ರ ಹೋಟೆಲ್’ ಬಳಿ ವಿರಾಮಕ್ಕಾಗಿ ನಿಂತಿದ್ದ ಸಂದರ್ಭದಲ್ಲಿ, ದಂಪತಿಗಳ ಬ್ಯಾಗ್ನಲ್ಲಿದ್ದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಸಂತ್ರಸ್ತರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಆರೋಪಿಯ ಹಿನ್ನೆಲೆ: ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ಕೈಗೊಂಡು, ಮಧ್ಯಪ್ರದೇಶ ಮೂಲದ ಸಮದ್ ಖಾನ್ (37) ಎಂಬಾತನನ್ನು ಸೆರೆಹಿಡಿದಿದ್ದಾರೆ. ಈತ ಅಂತರರಾಜ್ಯ ಮಟ್ಟದಲ್ಲಿ ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಶಯವಿದ್ದು, ಆತನಿಂದ ಕಳವು ಮಾಡಿದ್ದ ಪೂರ್ಣ ಆಭರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕಾರ್ಯಾಚರಣೆ ತಂಡ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಮತ್ತು ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಬಂಟ್ವಾಳ ಎಎಸ್ಪಿ ಯಶ್ ಕುಮಾರ್ ಶರ್ಮಾ ಅವರ ನೇರ ನಿರ್ದೇಶನದಂತೆ, ಇನ್ಸ್ಪೆಕ್ಟರ್ ಆನಂತ ಪದ್ಮನಾಭ ಹಾಗೂ ಪಿಎಸ್ಐ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದ ತಂಡ ಈ ಪ್ರಕರಣವನ್ನು ಭೇದಿಸಿದೆ.
ತಂಡದಲ್ಲಿ ಸಿಬ್ಬಂದಿಗಳಾದ ವಿಜಯ್ ಕುಮಾರ್, ಸುರೇಶ್ ಕುಮಾರ್, ರಾಜೇಶ್, ಇರ್ಷಾದ್ ಪಿ, ಬಸವರಾಜ್, ರೇವತಿ ಹಾಗೂ ತಾಂತ್ರಿಕ ವಿಭಾಗದ ಸಂಪತ್ ಕುಮಾರ್ ಮತ್ತು ದಿವಾಕರ್ ಪ್ರಮುಖ ಪಾತ್ರ ವಹಿಸಿದ್ದರು.



































