
ರಾಜ್ಯ ಪೊಲೀಸ್ ಇಲಾಖೆಯ ಅತ್ಯುನ್ನತ ಹುದ್ದೆಯಲ್ಲಿದ್ದುಕೊಂಡು, ಕರ್ತವ್ಯದ ಪಾವಿತ್ರ್ಯತೆಯನ್ನು ಮರೆತು ಕಚೇರಿಯಲ್ಲೇ ಅಸಭ್ಯ ವರ್ತನೆಯಲ್ಲಿ ತೊಡಗಿದ್ದ ಡಿಜಿಪಿ ಡಾ. ರಾಮಚಂದ್ರ ರಾವ್ ಅವರ ವಿಡಿಯೋ ಇದೀಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಇತ್ತೀಚೆಗಷ್ಟೇ ನಟಿ ರನ್ಯಾ ರಾವ್ ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿ ಸಿಕ್ಕಿಬಿದ್ದ ಪ್ರಕರಣ ಮಾಸುವ ಮುನ್ನವೇ, ಅವರ ತಂದೆಯೂ ಆಗಿರುವ ಡಿಜಿಪಿ ಅವರ ಈ ನಡವಳಿಕೆ ಪೊಲೀಸ್ ಇಲಾಖೆಯ ಘನತೆಗೆ ದೊಡ್ಡ ಪೆಟ್ಟು ನೀಡಿದೆ.
ಗಣವೇಶದಲ್ಲಿದ್ದೂ ನಿಯಮಗಳನ್ನು ಗಾಳಿಗೆ ತೂರಿ, ತನ್ನ ಕಚೇರಿಯ ಆವರಣದಲ್ಲೇ ಮಾಡೆಲ್ ಒಬ್ಬರ ಜೊತೆ ಏಕಾಂತವಾಗಿ ಕಾಲ ಕಳೆದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಳ್ಗಿಚ್ಚಿನಂತೆ ಹರಡಿವೆ. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಹಿರಿಯ ಅಧಿಕಾರಿಯೇ ಇಂತಹ ಹೀನ ಕೃತ್ಯಕ್ಕೆ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೆಲವು ದಿನಗಳ ಹಿಂದಷ್ಟೇ ಇಲಾಖೆಯ ಕೆಳಹಂತದ ಸಿಬ್ಬಂದಿಗಳು ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿ ಜೈಲು ಪಾಲಾಗಿದ್ದರು. ಆದರೆ ಈಗ ಇಲಾಖೆಯ ದಿಕ್ಸೂಚಿಯಾಗಬೇಕಿದ್ದ ಹಿರಿಯ ಅಧಿಕಾರಿಯೇ ಶಿಸ್ತಿನ ಮಿತಿ ಮೀರಿದ್ದಾರೆ.
ಈ ಆಘಾತಕಾರಿ ಬೆಳವಣಿಗೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನಗೊಂಡಿದ್ದು, ಗೃಹ ಇಲಾಖೆಯಿಂದ ತಕ್ಷಣದ ವರದಿ ಕೇಳಿದ್ದಾರೆ. “ಪೊಲೀಸ್ ಕವಚದ ಅಡಿಯಲ್ಲಿ ನಡೆಯುವ ಇಂತಹ ಅನೈತಿಕ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ” ಎಂದು ಅವರು ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಿಸ್ತುಕ್ರಮ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ.













