
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿದೆ ಎನ್ನಲಾದ ‘ರಾಜಾತಿಥ್ಯ’ ಮತ್ತು ಐಷಾರಾಮಿ ಸೌಲಭ್ಯಗಳನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪರಪ್ಪನ ಅಗ್ರಹಾರ ‘ಮನರಂಜನಾ ಕ್ಲಬ್’
ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, “ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್ಐ ಏಜೆಂಟರಂತಹ ದೇಶದ್ರೋಹಿಗಳಿಗೆ ಟಿ.ವಿ., ಮೊಬೈಲ್ ಫೋನ್, ಗುಂಡು-ತುಂಡುಗಳ ವ್ಯವಸ್ಥೆ ಎಲ್ಲವೂ ಬಹಳ ಸರಾಗವಾಗಿ ನಡೆಯುತ್ತಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯ ಸರಕಾರವು ಕಣ್ಮುಚ್ಚಿ ಕುಳಿತಿರುವುದು ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ದೇಶದ್ರೋಹಿಗಳಿಗೆ ಐಷಾರಾಮಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬುದನ್ನು ಮೇಲ್ನೋಟಕ್ಕೆ ತೋರಿಸುತ್ತದೆ ಎಂದು ಟೀಕಿಸಿದರು.
ಗುಪ್ತಚರ ಇಲಾಖೆ ‘ಸತ್ತುಹೋಗಿದೆ’
ವಿಪಕ್ಷ ನಾಯಕ ಆರ್. ಅಶೋಕ್ ಅವರು ಮಾತನಾಡಿ, “ಗುಪ್ತಚರ ವಿಭಾಗ ಎರಡು ವರ್ಷದಿಂದ ಸತ್ತು ಹೋಗಿದೆಯೇ? ಪೊಲೀಸ್ ಠಾಣೆಗಳನ್ನು ಇವರು ಕಾಂಗ್ರೆಸ್ ಕಚೇರಿ ಮಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದರು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಹ, “ಭಯೋತ್ಪಾದಕರಿಗೆ ಜೈಲಿನಲ್ಲೇ ಎಲ್ಲ ಅವಶ್ಯ ಸೌಲಭ್ಯ ನೀಡುವ ತೀರ್ಮಾನಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರ ಬಂದ ಹಾಗಿದೆ” ಎಂದು ದೂರಿದರು.
ಪ್ರತಿಭಟನೆಯಲ್ಲಿ ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಡಾ.ಸಿ.ಎನ್.ಅಶ್ವತ್ಥನಾರಾಯಣ್, ಸಿ.ಟಿ.ರವಿ, ಕೆ. ಗೋಪಾಲಯ್ಯ ಸೇರಿದಂತೆ ಹಲವು ಶಾಸಕರು ಮತ್ತು ಪ್ರಮುಖ ನಾಯಕರು ಭಾಗವಹಿಸಿದ್ದರು.



































