
ಕಾರ್ಕಳ: ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಬೆಲೆ ಏರಿಕೆ ಹಾಗೂ ಅಭಿವೃದ್ಧಿ ವಿರೋಧಿ ಧೋರಣೆಗಳನ್ನು ಖಂಡಿಸಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ವತಿಯಿಂದ ಬೃಹತ್ ಪ್ರತಿಭಟನಾ ಹಾದಿಯನ್ನು ತುಳಿಯಲು ಸಜ್ಜಾಗಿದೆ. ಮಾರ್ಚ್ 14 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಕಾರ್ಕಳದಲ್ಲಿ ಬೃಹತ್ ಜನಾಗ್ರಹ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸರ್ಕಾರದ ವಿವಿಧ ಜನವಿರೋಧಿ ನಿರ್ಧಾರಗಳ ವಿರುದ್ಧ ರಣಕಹಳೆ ಮೊಳಗಿಸಲು ಬಿಜೆಪಿ ನಿರ್ಧರಿಸಿದೆ.
ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರು ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಹೋರಾಟವು ಕೇವಲ ಒಂದು ನಗರಕ್ಕೆ ಸೀಮಿತವಾಗದೆ, ಕ್ಷೇತ್ರದ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲೂ ಪ್ರತಿಧ್ವನಿಸಲಿದೆ. ಸರ್ಕಾರದ ನೀತಿಗಳಿಂದಾಗಿ ಕರಾವಳಿ ಭಾಗದ ಅಭಿವೃದ್ಧಿ ಕುಂಠಿತಗೊಂಡಿದೆ ಮತ್ತು ಸಾಮಾನ್ಯ ಜನರ ಬದುಕು ದುಸ್ತರವಾಗಿದೆ ಎಂಬುದು ಬಿಜೆಪಿ ನಾಯಕರ ಪ್ರಬಲ ಆರೋಪವಾಗಿದೆ.
ಮುಖ್ಯವಾಗಿ ಕಟ್ಟಡ ನಿರ್ಮಾಣಕ್ಕೆ ಬೇಕಾದ ಕೆಂಪು ಕಲ್ಲು ಮತ್ತು ಮರಳಿನ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಎಲ್ಲಾ ಗಂಭೀರ ಸಮಸ್ಯೆಗಳನ್ನು ಸಾರ್ವಜನಿಕರ ಗಮನಕ್ಕೆ ತರಲು ಮತ್ತು ಸರ್ಕಾರವನ್ನು ಎಚ್ಚರಿಸಲು ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಪ್ರಮುಖರು ತಿಳಿಸಿದ್ದಾರೆ.

ಹೋರಾಟದ ಪ್ರಮುಖ ಅಂಶಗಳು:
- ಕಟ್ಟಡ ಸಾಮಗ್ರಿಗಳ ಕೊರತೆ: ಮರಳು ಮತ್ತು ಕೆಂಪು ಕಲ್ಲು ಸಾಗಾಟಕ್ಕೆ ಸೂಕ್ತ ನೀತಿ ಇಲ್ಲದೆ ನಿರ್ಮಾಣ ವಲಯ ಸ್ಥಗಿತಗೊಂಡಿದ್ದು, ದುಡಿಯುವ ವರ್ಗಕ್ಕೆ ತೀವ್ರ ಹಿನ್ನಡೆಯಾಗಿದೆ.
- ದಾಖಲೆಗಳ ಸಮಸ್ಯೆ: ಇ-ಸ್ವತ್ತು, ಖಾತೆ ಹಾಗೂ 9/11 ಏಕವಿನ್ಯಾಸ ಅನುಮೋದನೆ ಪ್ರಕ್ರಿಯೆಗಳು ವಿಳಂಬವಾಗುತ್ತಿದ್ದು, ಸಾಮಾನ್ಯ ಜನರು ಸಾಲ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ.
- ರೇಷನ್ ಕಾರ್ಡ್ ಮತ್ತು ಪಿಂಚಣಿ ಕಡಿತ: ಹೊಸ ಬಿಪಿಎಲ್ ಕಾರ್ಡ್ಗಳಿಗೆ ಅವಕಾಶ ನೀಡದಿರುವುದು ಮತ್ತು ಅಸ್ತಿತ್ವದಲ್ಲಿರುವ ಕಾರ್ಡ್ಗಳ ರದ್ದತಿ ಸೇರಿದಂತೆ ವಿಧವಾ ವೇತನ, ಸಂಧ್ಯಾ ಸುರಕ್ಷಾ ಪಿಂಚಣಿಗಳನ್ನು ಸ್ಥಗಿತಗೊಳಿಸಿರುವುದಕ್ಕೆ ಆಕ್ರೋಶ.
- ವಿದ್ಯುತ್ ದರ ಮತ್ತು ಲೋಡ್ ಶೆಡ್ಡಿಂಗ್: ನಿರಂತರವಾಗಿ ಏರಿಕೆಯಾಗುತ್ತಿರುವ ವಿದ್ಯುತ್ ದರ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ನಿಂದ ಸಾರ್ವಜನಿಕರು ಮತ್ತು ಉದ್ದಿಮೆದಾರರು ಹೈರಾಣಾಗಿದ್ದಾರೆ.
- ಕರಾವಳಿ ನಿರ್ಲಕ್ಷ್ಯ: ರಾಜ್ಯ ಬಜೆಟ್ನಲ್ಲಿ ಕರಾವಳಿ ಭಾಗದ ಪ್ರವಾಸೋದ್ಯಮ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ಅನುದಾನ ನೀಡದೆ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬ ಆರೋಪ.
ಸರ್ಕಾರದ ವೈಫಲ್ಯಗಳ ವಿರುದ್ಧ ವಾಗ್ದಾಳಿ: ಕಳೆದ 2 ವರ್ಷ 9 ತಿಂಗಳ ಅವಧಿಯಲ್ಲಿ ಸರ್ಕಾರದಿಂದ ಯಾವುದೇ ವಿಶೇಷ ಅನುದಾನ ಬಿಡುಗಡೆಯಾಗಿಲ್ಲ ಎಂದು ಶಾಸಕರು ಸುನಿಲ್ ಕುಮಾರ್ ಕಿಡಿಕಾರಿದ್ದಾರೆ. ಶಾಸಕರ ನಿಧಿಯಿಂದಲೇ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಗುತ್ತಿದೆ. ಸರ್ಕಾರ ಸಾಲದ ಸುಳಿಗೆ ಸಿಲುಕಿದ್ದು, ಜನರಿಗೆ ನೀಡಬೇಕಾದ ಮೂಲಭೂತ ಸವಲತ್ತುಗಳನ್ನು ನೀಡಲು ವಿಫಲವಾಗಿದೆ. ಅಲ್ಲದೆ, ಮುಸ್ಲಿಂ ಓಲೈಕೆ ಮತ್ತು ದ್ವೇಷದ ರಾಜಕಾರಣದ ಭಾಗವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆಗಳನ್ನು ಹೂಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.
ಭ್ರಷ್ಟಾಚಾರ ಮತ್ತು ಕಾನೂನು ಸುವ್ಯವಸ್ಥೆ: ಗ್ರಾಮ ಪಂಚಾಯತ್ ಮಟ್ಟದಿಂದ ಹಿಡಿದು ವಿಧಾನಸೌಧದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಎಸ್ಸಿಪಿ-ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ದಲಿತ ಸಮುದಾಯಕ್ಕೆ ಅನ್ಯಾಯ ಎಸಗಲಾಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತ ಯಂತ್ರ ಸಂಪೂರ್ಣವಾಗಿ ಹಳಿತಪ್ಪಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
ಈ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್, ವಕ್ತಾರ ರವೀಂದ್ರ ಮೊಯ್ಲಿ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಸೇರಿದಂತೆ ಪ್ರಮುಖರು ಉಪಸ್ಥಿತರಿರಲಿದ್ದಾರೆ.













