
ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಸುಲಿಗೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಸೊರಬದ ಆನವಟ್ಟಿ ಗ್ರಾಮದ ಸಂಜಯ್ ಎಲ್ (33) ಮತ್ತು ದಾವಣಗೆರೆ ಜಿಲ್ಲೆಯ ವಿನೋಬನಗರದ ವಸಂತ ಕುಮಾರ್ (30) ಎಂದು ಗುರುತಿಸಲಾಗಿದೆ.

ಪ್ರಕರಣದ ವಿವರ ಮತ್ತು ಜಪ್ತಿ
ಮೀನಾಕ್ಷಿ ಎಂಬವರು ತಮ್ಮ ಮಗಳೊಂದಿಗೆ ಕುಂದಾಪುರದ ಶಾಸ್ತ್ರೀ ಸರ್ಕಲ್ಗೆ ಸರ್ವಿಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಹಿಂದಿನಿಂದ ಬೈಕ್ನಲ್ಲಿ ಬಂದ ಈ ಇಬ್ಬರು ಆರೋಪಿಗಳು ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳನ್ನು ಬಂಧಿಸಿದ ಪೊಲೀಸರು, ಬಂಧಿತರಿಂದ ₹3 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ, ಕೃತ್ಯಕ್ಕೆ ಬಳಸಿದ್ದ ಸ್ಕಾರ್ಫಿಯೋ ಕಾರು ಮತ್ತು ಬೈಕ್ ಸಹಿತ ಒಟ್ಟು ₹8.20 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.



































