
ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ಸ್ಮಾರಕವನ್ನು ಅವರ ಕರ್ಮಭೂಮಿಯಾದ ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, “ಭೈರಪ್ಪನವರು ಬಹುಕಾಲ ಮೈಸೂರಿನಲ್ಲೇ ಕಾಲ ಕಳೆದಿದ್ದರು. ಹೈಸ್ಕೂಲ್ನಿಂದ ಎಂಎವರೆಗಿನ ವಿದ್ಯಾಭ್ಯಾಸವನ್ನು ಅಲ್ಲಿಯೇ ಮಾಡಿದ್ದರು. ಹಾಗಾಗಿ ಅವರ ಸ್ಮಾರಕವನ್ನು ಮೈಸೂರಿನಲ್ಲಿಯೇ ನಿರ್ಮಿಸುತ್ತೇವೆ” ಎಂದು ತಿಳಿಸಿದರು.
ಅಲ್ಲದೆ, “ಭೈರಪ್ಪನವರು ಸುಮಾರು 25 ಕಾದಂಬರಿಗಳನ್ನು ಬರೆದಿದ್ದಾರೆ. ಅವರ ಕೃತಿಗಳು ಸುಮಾರು 40 ಭಾಷೆಗಳಿಗೆ ಭಾಷಾಂತರಗೊಂಡಿವೆ. ಇಷ್ಟು ಭಾಷೆಗಳಿಗೆ ಅನುವಾದಗೊಂಡ ಏಕೈಕ ಲೇಖಕ ಅವರೇ ಇರಬಹುದು” ಎಂದು ಭೈರಪ್ಪ ಅವರ ಸಾಧನೆಯನ್ನು ಶ್ಲಾಘಿಸಿದರು. ಅಗಲಿದ ಚೇತನಕ್ಕೆ ಶಾಂತಿ ಕೋರಿ, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ಸಂತಾಪ ಸೂಚಿಸಿದರು.



































