
ಉಡುಪಿ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 25ರಂದು ಕಾರ್ಕಳ ತಾಲೂಕಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ವಿವಿಧ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ನಿಗದಿತ ವೇಳಾಪಟ್ಟಿಯಂತೆ, ಅಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ 11.30ಕ್ಕೆ ಕಾರ್ಕಳದ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್ಗೆ ಬಂದಿಳಿಯಲಿದ್ದಾರೆ. ಕಾರ್ಕಳದ ಕಾಬೆಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಯೋಗದಲ್ಲಿ ಸಿದ್ಧಗೊಂಡಿರುವ ನೂತನ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ತದನಂತರ ಕುಕ್ಕುಂದೂರಿನ ಕಿಸಾನ್ ಸಭಾ ಟ್ರಸ್ಟ್ನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ, ನೂತನ ಸಭಾಭವನವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಗಳ ಬಳಿಕ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಸಂಜೆ ಮಂಗಳೂರು ಮಾರ್ಗವಾಗಿ ಮೈಸೂರಿಗೆ ನಿರ್ಗಮಿಸಲಿದ್ದಾರೆ.




































