
ಬಂಟ್ವಾಳ: ಕೋಮು ಸೌಹಾರ್ದತೆಗೆ ಧಕ್ಕೆಯಾದಂತೆ ಮಾತನಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಹಿಂದೂ ಜಾಗರಣ ವೇದಿಕೆಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 12ರಂದು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಮಾತನಾಡಿದ್ದರು. ಅವರ ಭಾಷಣದಲ್ಲಿ ಸಮಾಜದಲ್ಲಿ ಕೋಮು ದ್ವೇಷ ಹುಟ್ಟುಹಾಕುವ ರೀತಿಯ ಪ್ರಚೋದನಕಾರಿ ಹೇಳಿಕೆಗಳಿದ್ದು, ಇದು ಶಾಂತಿಯುತ ಸಹವಾಸಕ್ಕೆ ಅಡ್ಡಿಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಜೂನ್ 2ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 353 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ಸಂಖ್ಯೆ 60/2025 ಆಗಿದೆ.
ಈ ಮೊದಲೇ ಅವರ ವಿರುದ್ದ ಸಾರ್ವಜನಿಕ ವೇದಿಕೆಗಳಲ್ಲಿ ಉಗ್ರ ಭಾಷಣ ಮಾಡುವ ಆರೋಪಗಳು ಕೇಳಿಬಂದಿರುವುದರಿಂದ, ಇದೀಗ ದಾಖಲಾಗಿರುವ ಪ್ರಕರಣ ಮತ್ತೊಮ್ಮೆ ಭಾರೀ ಚರ್ಚೆಗೆ ಕಾರಣವಾಗಿದೆ.
ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದು, ಅಗತ್ಯ ದಾಖಲೆಗಳ ಸಂಗ್ರಹ ಕಾರ್ಯ ಕೂಡ ಪ್ರಾರಂಭವಾಗಿದೆ.