
ಮಂಗಳೂರು : ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪಗಳ ಬೆನ್ನಲ್ಲೇ, ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದಾರೆ.
ತಮ್ಮ ವಕೀಲರೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಸುಜಾತಾ ಭಟ್, ಮಗಳ ನಾಪತ್ತೆ ಪ್ರಕರಣದ ಬಗ್ಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದರು. ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ಅನನ್ಯಾ ಭಟ್ 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದವರು ನಿಗೂಢವಾಗಿ ನಾಪತ್ತೆಯಾಗಿದ್ದರು.
ಹೊಸ ಆರೋಪಗಳ ಸ್ಫೋಟ:
ಇತ್ತೀಚೆಗೆ, ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದು, ಧರ್ಮಸ್ಥಳದಲ್ಲಿ ಒತ್ತಡದಿಂದ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಆರೋಪಿಸಿದ್ದರು. ಈ ಪತ್ರ ಬರೆದ ಕೆಲವೇ ದಿನಗಳ ನಂತರ, ಅದೇ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಮುಂದೆ ಹೇಳಿಕೆಯನ್ನೂ ನೀಡಿದ್ದರು. ಅಚ್ಚರಿ ಎಂಬಂತೆ, ನ್ಯಾಯಾಲಯಕ್ಕೆ ಬರುವಾಗ ತಮ್ಮ ಜೊತೆ ಅಸ್ತಿಪಂಜರವೊಂದನ್ನು ತಂದಿದ್ದು, ಅದನ್ನು ಪೊಲೀಸರು ವಿಧಿ ವಿಜ್ಞಾನ ತನಿಖೆಗೆ ಒಳಪಡಿಸಿದ್ದಾರೆ.
ಧರ್ಮಸ್ಥಳದ ಸುತ್ತಮುತ್ತ ಹಲವು ಕಡೆಗಳಲ್ಲಿ ತಾನು ಶವಗಳನ್ನು ಹೂತು ಹಾಕಿರುವುದಾಗಿ ಆ ವ್ಯಕ್ತಿ ತಿಳಿಸಿದ್ದು, ಪೊಲೀಸರು ತನಿಖೆ ನಡೆಸುವುದಾದರೆ ಆ ಸ್ಥಳಗಳನ್ನು ತೋರಿಸುವುದಾಗಿ ಹೇಳಿದ್ದಾರೆ. ಪ್ರಸ್ತುತ, ಆ ವ್ಯಕ್ತಿಯನ್ನು ಪ್ರತಿನಿಧಿಸುತ್ತಿರುವ ಇಬ್ಬರು ನ್ಯಾಯವಾದಿಗಳು ಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳ (SIT) ರಚಿಸುವಂತೆ ಬೇಡಿಕೆ ಮುಂದಿಟ್ಟಿದ್ದಾರೆ.
ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಕೊಲೆಗಳು ಮತ್ತು ಒತ್ತಡದಿಂದಾಗಿ ತಾನೇ ಶವಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿರುವುದು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಇದೇ ಸನ್ನಿವೇಶದಲ್ಲಿ ಸುಜಾತಾ ಭಟ್ ಅವರು ತಮ್ಮ ಮಗಳೂ ಇದೇ ಸ್ಥಳದಲ್ಲಿ ಕಾಣೆಯಾಗಿದ್ದಾಳೆ ಎಂದು ದೂರು ಸಲ್ಲಿಸಲು ಮುಂದಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ. ಈ ಬೆಳವಣಿಗೆಗಳು ಅನನ್ಯಾ ಭಟ್ ನಾಪತ್ತೆ ಪ್ರಕರಣದ ಮರು ತನಿಖೆಗೆ ಒತ್ತಡ ಹೆಚ್ಚಿಸಿವೆ.