
ಧಾರವಾಡ : ಧಾರವಾಡ ಜಿಲ್ಲೆಯ ಕ್ಯಾರಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿರಡಿನಗರ ಮತ್ತು ಸಾಧುನಗರ ಪ್ರದೇಶಗಳಲ್ಲಿ ಬುಧವಾರ ಹುಚ್ಚುನಾಯಿಯೊಂದು ಅಟ್ಟಹಾಸ ಮೆರೆದಿದ್ದು, ಹತ್ತಕ್ಕೂ ಹೆಚ್ಚು ಜನರನ್ನು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಈ ಘಟನೆಯಿಂದ ಸ್ಥಳೀಯ ನಿವಾಸಿಗಳು ತೀವ್ರ ಭಯಭೀತರಾಗಿದ್ದಾರೆ.
ಮನೆಯ ಮುಂದೆ ಆಟವಾಡುತ್ತಿದ್ದ ಪುಟ್ಟ ಮಕ್ಕಳು ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರ ಮೇಲೆ ನಾಯಿ ಏಕಾಏಕಿ ದಾಳಿ ನಡೆಸಿದೆ. ಈ ಭೀಕರ ಘಟನೆಯಲ್ಲಿ 5 ವರ್ಷದ ರಶೀದ್ ಎಂಬ ಬಾಲಕನ ಕಿವಿ ಹಾಗೂ ದೇಹದ ವಿವಿಧ ಭಾಗಗಳಿಗೆ ನಾಯಿ ಬಲವಾಗಿ ಕಚ್ಚಿದ್ದು, ಬಾಲಕನ ಸ್ಥಿತಿ ಗಂಭೀರವಾಗಿದೆ. ಸದ್ಯ ಬಾಲಕನಿಗೆ ಜಿಲ್ಲಾಸ್ಪತ್ರೆಯ ಐಸಿಯು (ICU) ವಿಭಾಗದಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ದಾಳಿಗೆ ಒಳಗಾದವರಲ್ಲಿ ಶಿರಡಿನಗರದ ಗಂಗವ್ವ ಉಪ್ಪಾರ, ಮುಮ್ಮಿಗಟ್ಟಿಯ ಲಕ್ಷ್ಮೀ ಮಾದರ ಸೇರಿದಂತೆ ಇತರ 10 ಮಂದಿ ಗಾಯಗೊಂಡಿದ್ದು, ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಯಿಯ ಅತಿರೇಕದ ವರ್ತನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು, ಮುಂದಿನ ಅನಾಹುತ ತಪ್ಪಿಸಲು ಆ ನಾಯಿಯನ್ನು ಹೊಡೆದು ಸಾಯಿಸಿದ್ದಾರೆ.



































