
ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನಿಷೇಧದ ಕುರಿತು ರಾಜ್ಯದಲ್ಲಿ ರಾಜಕೀಯ ವಿವಾದ ತಾರಕಕ್ಕೇರಿರುವ ನಡುವೆಯೇ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, “ರಾಜ್ಯದಲ್ಲಿ ಆರ್ಎಸ್ಎಸ್ ನಿಷೇಧಿಸಬೇಕು, ಅದರಲ್ಲಿ ತಪ್ಪೇನಿಲ್ಲ,” ಎಂದು ಹೇಳುವ ಮೂಲಕ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘ ಕೇವಲ ಸಾಮಾಜಿಕ ಸಂಘಟನೆಯಲ್ಲ, ಬದಲಿಗೆ ಅದು ಒಂದು ರಾಜಕೀಯ ಸಂಘಟನೆ. ಹೀಗಾಗಿ, ಅದರ ಚಟುವಟಿಕೆಗಳು ಮತ್ತು ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಬಾರದು. ಅಲ್ಲದೇ, ಆರ್ಎಸ್ಎಸ್ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಆವರಣ ಬಳಸಬಾರದು ಎಂದು ಆಗ್ರಹಿಸಿದರು.
“ಆರ್ಎಸ್ಎಸ್ ನಾಯಕರು ವಿವಿಧ ಸರ್ಕಾರಗಳನ್ನು ರಚಿಸುವಲ್ಲಿ ಮತ್ತು ಉರುಳಿಸುವಲ್ಲಿ ಭಾಗಿಯಾಗಿದ್ದಾರೆ. ಚುನಾವಣೆಯಲ್ಲೂ ಈ ಸಂಘಟನೆಯ ನಾಯಕರು ಸ್ಪರ್ಧಿಸುತ್ತಾರೆ. ಹಾಗಾಗಿ ಅದು ಸಾಮಾಜಿಕ ಸಂಘಟನೆಯಲ್ಲ,” ಎಂದು ಗುಂಡೂರಾವ್ ಸಮರ್ಥಿಸಿಕೊಂಡರು.
ಸಂಪುಟ ಪುನಾರಚನೆ ಚರ್ಚೆಯೇ ಆಗಿಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದ ಭೋಜನ ಕೂಟದಲ್ಲಿ ಸಂಪುಟ ಪುನಾರಚನೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. “ಔತಣಕೂಟದಲ್ಲಿ ಹಾಜರಾಗಿದ್ದ ಯಾರೂ ಈ ವಿಷಯ ಪ್ರಸ್ತಾಪಿಸಿಯೇ ಇಲ್ಲ. ಅಲ್ಲಿ ವಿವಿಧ ಇಲಾಖೆಗಳ ಕಾರ್ಯಕ್ಷಮತೆ ಮತ್ತು ರಾಜ್ಯದ ಪರಿಸ್ಥಿತಿ ಬಗ್ಗೆ ಮಾತ್ರ ಚರ್ಚೆ ನಡೆಸಲಾಯಿತು,” ಎಂದರು.
ಬೆಂಗಳೂರು ರಸ್ತೆಗಳ ಬಗ್ಗೆ ಸ್ಪಷ್ಟನೆ
ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಬೆಂಗಳೂರಿನ ರಸ್ತೆಗಳ ದಯನೀಯ ಸ್ಥಿತಿ ಕುರಿತು ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಳೆದ ಏಳು ತಿಂಗಳಿನಿಂದ ಮಳೆಯಾಗುತ್ತಿದೆ. ರಸ್ತೆಗಳ ಅಭಿವೃದ್ಧಿಗೆ ಯುದ್ಧೋಪಾದಿಯಲ್ಲಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುವುದು. ಮುಂದಿನ ನಾಲ್ಕು ತಿಂಗಳಲ್ಲಿ ಎಲ್ಲ ರಸ್ತೆಗಳು ಸಹಜ ಸ್ಥಿತಿಗೆ ಬರಲಿವೆ ಎಂದು ಭರವಸೆ ನೀಡಿದರು.
ಇದೇ ವೇಳೆ, ರಾಜ್ಯದಾದ್ಯಂತ ಸೂಪರ್ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಕಡ್ಡಾಯ ಕೆಲಸ ನಿಯಮ ಮತ್ತು ಕೌನ್ಸೆಲಿಂಗ್ ಮೂಲಕ ವೈದ್ಯರನ್ನು ನೇಮಿಸಲಾಗುವುದು. ಪ್ರಸ್ತುತ 230 ವೈದ್ಯರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದರು.



































