
ಉಡುಪಿ: ಮುಕುಂದಕ್ರಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸ್ಥಾಪಕರ ದಿನಾಚರಣೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ನ ಆಡಳಿತಾಧಿಕಾರಿ ಡಾ. ಶ್ರೀಧರ್ ರಂಗನಾಥ್ ಪೈ ಅವರು, ಸಂಸ್ಥಾಪಕರಾದ ಡಾ.ಟಿ.ಎಂ.ಎ. ಪೈ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಡಾ. ಶ್ರೀಧರ್ ರಂಗನಾಥ್ ಪೈ, ಡಾ. ಟಿ.ಎಂ.ಎ. ಪೈ ಅವರ ಸಾಧನೆಗಳನ್ನು ಸ್ಮರಿಸಿದರು. ಜೊತೆಗೆ, ‘ನಮಸ್ತೆ’ ಪದದ ಪ್ರಾಮುಖ್ಯತೆಯನ್ನು ಕಥೆಯ ಮೂಲಕ ವಿವರಿಸಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಂ.ಜಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಲಕ್ಷ್ಮೀ ನಾರಾಯಣ ಕಾರಂತರು ಮಾತನಾಡಿ, “ಡಾ. ಟಿ.ಎಂ.ಎ. ಪೈ ಅವರು ಬ್ಯಾಂಕಿಂಗ್, ಶಿಕ್ಷಣ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರ ಬದುಕಿಗೆ ಮಾದರಿಯಾಗಿದ್ದಾರೆ” ಎಂದು ಶ್ಲಾಘಿಸಿದರು.
ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಂಗ ಪೈ ಅವರು ಡಾ. ಟಿ.ಎಂ.ಎ. ಪೈ ಅವರ ಗತಜೀವನದ ಕುರಿತು ಮೆಲುಕು ಹಾಕಿದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸುರೇಂದ್ರ ಮೆಂಡನ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಎಲ್ಲರೂ ಸಂಸ್ಥಾಪಕರ ಭಾವಚಿತ್ರಕ್ಕೆ ಹೂದಳಗಳನ್ನು ಅರ್ಪಿಸಿ ನಮಸ್ಕರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ವಿನುತಾ ಎಸ್. ನಾಯಕ್ ಸ್ವಾಗತ ಭಾಷಣ ಮಾಡಿದರು. ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಇದೇ ವೇಳೆ, ಜಯಲಕ್ಷ್ಮೀ ಅವರು ಶಾಲಾ ಸಂಸ್ಥಾಪಕರ ಸಾಧನೆಯ ಬಗ್ಗೆ ಮಾತನಾಡಿದರು. ಶಿಕ್ಷಕಿಯರಾದ ನಂದ ಹಾಗೂ ದಿಶಾ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ವೀಣಾ ಕಾಮತ್ ಧನ್ಯವಾದ ಸಮರ್ಪಣೆ ಮಾಡಿದರು.