
ಮಂಗಳೂರು : ಕರಾವಳಿಯಲ್ಲಿ ಕೋಮು ಘಟನೆಗಳಿಂದಾಗಿ ಹೂಡಿಕೆದಾರರು ಹಿಂದೇಟು ಹಾಕುತ್ತಿದ್ದಾರೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಯಿಂದ ಉಂಟಾಗಿದ್ದ ರಾಜಕೀಯ ಸಂಚಲನಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ತಣ್ಣೀರೆರಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಸುಧಾರಿಸಿದ್ದು, ಅಭಿವೃದ್ಧಿಗೆ ಪೂರಕ ವಾತಾವರಣ ಮರಳಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರಿಯಾಂಕ್ ಖರ್ಗೆ ಅವರು ಸಾಮಾನ್ಯ ಅರ್ಥದಲ್ಲಿ ಮಾತನಾಡಿದ್ದಾರೆ. ಆದರೆ ವಾಸ್ತವವಾಗಿ ಪೊಲೀಸ್ ಇಲಾಖೆಯ ಅಂಕಿಅಂಶಗಳ ಪ್ರಕಾರ ದ್ವೇಷದ ಅಪರಾಧಗಳು ಮತ್ತು ಮಾದಕ ದ್ರವ್ಯ ಜಾಲದ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿವೆ ಎಂದು ಸ್ಪಷ್ಟಪಡಿಸಿದರು. “ಹಿಂದೆ ಅಶಾಂತಿಯ ವಾತಾವರಣ ಇತ್ತು ಎಂಬುದು ನಿಜ, ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಗೃಹ ಸಚಿವನಾಗಿ ನಾನು ಇದನ್ನು ಅಧಿಕೃತವಾಗಿ ಹೇಳುತ್ತಿದ್ದೇನೆ. ಕರಾವಳಿಯಲ್ಲಿ ಈಗ ಶಾಂತಿ ನೆಲೆಸುತ್ತಿರುವುದು ನನಗೆ ತೃಪ್ತಿ ತಂದಿದೆ” ಎಂದು ಅವರು ಹೇಳಿದರು.
ಪೋಷಕರು ತಮ್ಮ ಮಕ್ಕಳನ್ನು ಸುರಕ್ಷತೆಯ ದೃಷ್ಟಿಯಿಂದ ಮೈಸೂರು ಅಥವಾ ಬೆಂಗಳೂರಿಗೆ ಕಳುಹಿಸುತ್ತಿದ್ದ ಕಾಲ ಈಗ ದೂರವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯ ಹಲ್ಲೆಗಳು ಅಥವಾ ನೈತಿಕ ಪೊಲೀಸ್ಗಿರಿ ಪ್ರಕರಣಗಳು ನಿಯಂತ್ರಣಕ್ಕೆ ಬಂದಿವೆ. ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಈ ಬದಲಾವಣೆ ಸಾಧ್ಯವಾಗಿದೆ ಎಂದ ಅವರು, ಡ್ರಗ್ಸ್ ಮಾಫಿಯಾವನ್ನು ಬುಡಸಮೇತ ಕಿತ್ತೆಸೆಯಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಶಿಕ್ಷಣ ಸಂಸ್ಥೆಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ ಜಾಗೃತಿ ಮೂಡಿಸುವಂತೆ ಮತ್ತು ಎಲ್ಲಾ ಪ್ರಕರಣಗಳನ್ನು ಕಡ್ಡಾಯವಾಗಿ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿರುವುದಾಗಿ ತಿಳಿಸಿದರು.



































