
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ನಿರಂತರವಾಗಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ತನಕ ಈ ಯೋಜನೆ ರದ್ದಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸಲು ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. “ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರ ಕಲ್ಯಾಣಕ್ಕಾಗಿ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ನೇರವಾಗಿ ಯಜಮಾನಿಯ ಖಾತೆಗೆ ಜಮಾ ಮಾಡಲಾಗುತ್ತಿದೆ. ಚುನಾವಣಾ ಕ್ಷೇತ್ರಗಳಿಗೆ ಮಾತ್ರ ಹಣ ನೀಡಲಾಗುತ್ತಿದೆ ಎಂಬ ಆರೋಪ ಶುದ್ಧ ಸುಳ್ಳು, ಆಧಾರರಹಿತ” ಎಂದು ಅವರು ಸ್ಪಷ್ಟಪಡಿಸಿದರು.
ಯೋಜನೆಗೆ ಯಾವುದೇ ಅಡೆತಡೆ ಇಲ್ಲ ಎಂದು ತಿಳಿಸಿದ ಸಚಿವೆ, “ಜಿಎಸ್ಟಿ, ಜಿಎಸ್ಟಿಯೇತರ ಹಾಗೂ ಆದಾಯ ತೆರಿಗೆ ಅಂಶಗಳನ್ನು ಪರಿಗಣಿಸಿ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ನವೆಂಬರ್, ಡಿಸೆಂಬರ್ ತಿಂಗಳ ಹಣ ಶೀಘ್ರದಲ್ಲೇ ಸಂದಾಯ ಮಾಡಲಾಗುವುದು. ಗೃಹಲಕ್ಷ್ಮಿ ಯೋಜನೆ ಚುನಾವಣೆಗೋಸ್ಕರವಲ್ಲ, ಅದು ನಿರಂತರವಾಗಿ ಮುಂದುವರಿಯಲಿದೆ” ಎಂದು ಭರವಸೆ ನೀಡಿದರು.