
ಗುವಾಹಟಿ: ಕಳೆದ ಮೂರು ದಿನಗಳಿಂದ ಈಶಾನ್ಯ ಭಾರತದ ಅಸ್ಸಾಂ, ಮಣಿಪುರ, ತ್ರಿಪುರ, ಸಿಕ್ಕಿಂ, ಅರುಣಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಘಾತಕರ ಮಳೆಯು ಅಪಾರ ಹಾನಿಯನ್ನುಂಟುಮಾಡಿದ್ದು, ಕನಿಷ್ಠ 34 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಿರಂತರ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ಸಿಕ್ಕಿಂ ರಾಜ್ಯದ ಉತ್ತರ ಭಾಗದ ಮುನ್ಶಿತಾಂಗ್ ಪ್ರದೇಶದಲ್ಲಿ 1,200 ಕ್ಕೂ ಹೆಚ್ಚು ಪ್ರವಾಸಿಗರು ಸಿಲುಕಿಕೊಂಡಿದ್ದು, ಭಾನುವಾರ ರಕ್ಷಣಾ ಕಾರ್ಯಾಚರಣೆ ನಡೆಯಬೇಕಿತ್ತು. ಆದರೆ ನಿರಂತರ ಭೂಕುಸಿತದಿಂದ ಕಾರ್ಯಾಚರಣೆ ವಿಳಂಬಗೊಂಡಿದ್ದು, ಇದೀಗ ವಾಯುಪಡೆಯ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇ 29ರಂದು ತೀಸ್ತಾ ನದಿಗೆ ವಾಹನ ಉರುಳಿದ ಘಟನೆ ಸಂಭವಿಸಿದ್ದು, ಎಂಟು ಮಂದಿ ನಾಪತ್ತೆಯಾಗಿದ್ದಾರೆ. ಇನ್ನೂ ಅವರ ಸುಳಿವು ಪತ್ತೆಯಾಗಿಲ್ಲ.ಇದರ ಜೊತೆಗೆ, ಮೇಘಾಲಯದ 10 ಜಿಲ್ಲೆಗಳು ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ಬಾಧಿತವಾಗಿದ್ದು, ತ್ರಿಪುರಾದಲ್ಲಿ 10,000 ಕ್ಕೂ ಹೆಚ್ಚು ಜನರು ತಮ್ಮ ಮನೆ ಬಿಟ್ಟು ಸ್ಥಳಾಂತರವಾಗಬೇಕಾದ ಪರಿಸ್ಥಿತಿ ಎದುರಿಸಿದ್ದಾರೆ.

ಅಸ್ಸಾಂ ರಾಜ್ಯದಲ್ಲಿ 19 ಜಿಲ್ಲೆಗಳ 764 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿದ್ದು, 3.6 ಲಕ್ಷಕ್ಕೂ ಹೆಚ್ಚು ಜನರಿಗೆ ತೀವ್ರ ಹಾನಿ ಸಂಭವಿಸಿದೆ. ಭಾನುವಾರ ಇಬ್ಬರು ಮೃತಪಟ್ಟ ಹಿನ್ನೆಲೆ, ಅಸ್ಸಾಂನಲ್ಲಿನ ಸಾವಿನ ಸಂಖ್ಯೆ 10ಕ್ಕೆ ಏರಿದೆ. ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ, ನದಿಪಾತ್ರದ 10,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತ್ವರಿತ ನೆರವು ಒದಗಿಸಲು ಭರವಸೆ ನೀಡಿದ್ದು, ಅಸ್ಸಾಂ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆಂದು ತಿಳಿದು ಬಂದಿದೆ.