
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ಪ್ರದೇಶದಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಭೂ ಕುಸಿತ ಸಂಭವಿಸುವ ಅಪಾಯದ ಮುನ್ನೆಚ್ಚರಿಕಾ ಕ್ರಮವಾಗಿ, ಜಿಲ್ಲಾಡಳಿತವು ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಿದೆ.
ಮಲ್ಪೆ-ಆಗುಂಬೆ ಸಂಪರ್ಕಿಸುವ 169ಎ ಹೆದ್ದಾರಿಯಲ್ಲಿ ಭಾರೀ ಮಳೆಯಿಂದಾಗಿ ಭೂಮಿಯಲ್ಲಿ ಭೂ ಕುಸಿತ ಸಂಭವಿಸುವ ಅಪಾಯದ ಮುನ್ನೆಚ್ಚರಿಕಾ ಕ್ರಮವಾಗಿ, ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಉಡುಪಿಯಿಂದ ತೀರ್ಥಹಳ್ಳಿಗೆ ಪ್ರಯಾಣಿಸುವ ಭಾರೀ ವಾಹನಗಳು ಈಗ ಬದಲಿ ಮಾರ್ಗವಾದ ಉಡುಪಿ – ಕುಂದಾಪುರ – ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗವಾಗಿ ಸಾಗಬೇಕಾಗಿದೆ. ಲಘು ವಾಹನಗಳಿಗೆ ಮಾತ್ರ ಆಗುಂಬೆ ಘಾಟಿ ರಸ್ತೆ ತೆರೆಯಲ್ಪಟ್ಟಿದ್ದು, ವಾಹನಚಾಲಕರು ಎಚ್ಚರಿಕೆಯಿಂದ ಸಾಗಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ಪರಿಸ್ಥಿತಿಗೆ ಅನುಗುಣವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.