
ಹೆಬ್ರಿ: ಮುದ್ರಾಡಿಯ ವಿದ್ಯಾಸಾಗರ್ ಎಜುಕೇಶನ್ ಟ್ರಸ್ಟ್ ಅಧೀನದ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭವು ಅತ್ಯಂತ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದಲ್ಲಿ ಶೈಕ್ಷಣಿಕ, ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅಭೂತಪೂರ್ವ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮತ್ತು ಶಾಲೆಯ ಏಳಿಗೆಗೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು.
ಮಕ್ಕಳೊಂದಿಗೆ ಸಮಯ ಕಳೆಯಿರಿ: ದಿಕ್ಸೂಚಿ ಭಾಷಣ ಮಾಡಿದ ಕಾರ್ಕಳ ಎಸ್.ವಿ.ಟಿ. ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಮಿತ್ರಪ್ರಭಾ ಹೆಗ್ಡೆ ಅವರು ಮಾತನಾಡಿ, “ಇಂದಿನ ಜಂಜಾಟದ ಜೀವನದಲ್ಲಿ ಪೋಷಕರು ಮಕ್ಕಳಿಗಾಗಿ ಸಮಯ ಮೀಸಲಿಡುವುದು ಅತ್ಯಗತ್ಯ. ಹೆತ್ತವರ ಪರಿಶ್ರಮದ ಹಾದಿ ಮಕ್ಕಳಿಗೆ ತಿಳಿದಾಗ ಅವರು ದಾರಿ ತಪ್ಪದೆ ಉತ್ತಮ ಪ್ರಜೆಗಳಾಗುತ್ತಾರೆ. ಪ್ರತಿಯೊಬ್ಬ ಮಗುವಿನಲ್ಲಿಯೂ ವಿಶೇಷ ಸಾಮರ್ಥ್ಯವಿರುತ್ತದೆ, ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಲಿ” ಎಂದು ಕಿವಿಮಾತು ಹೇಳಿದರು.
ಸಂಸ್ಕಾರಯುತ ಶಿಕ್ಷಣದ ಮಹತ್ವ: ಮುಖ್ಯ ಅತಿಥಿಯಾಗಿದ್ದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮಾತನಾಡಿ, ಕೇವಲ ಅಂಕಗಳಿಕೆಯಷ್ಟೇ ಶಿಕ್ಷಣವಲ್ಲ, ಅದರೊಂದಿಗೆ ಸಂಸ್ಕಾರವೂ ಇರಬೇಕು. ಸಮಾಜ ಮತ್ತು ಗುರುಹಿರಿಯರ ಋಣ ತೀರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು. ಇದೇ ವೇಳೆ ಹಳೆ ವಿದ್ಯಾರ್ಥಿನಿ ಪರಿಣಿತ ಶೆಟ್ಟಿ ಅವರು ಶಾಲೆಯ ಮೇಲಿನ ತಮ್ಮ ಅಭಿಮಾನವನ್ನು ಹಂಚಿಕೊಂಡು, ಸಂಸ್ಥೆಯ ಬೆಳವಣಿಗೆಗೆ ಕೈಜೋಡಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಸರ್ವತೋಮುಖ ಬೆಳವಣಿಗೆಗೆ ಒತ್ತು: ಸಂಸ್ಥೆಯ ಕಾರ್ಯದರ್ಶಿ ಮುದ್ರಾಡಿ ಅಶೋಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯು ಕೇವಲ ಪಠ್ಯಕ್ಕೆ ಸೀಮಿತವಾಗದೆ ಕ್ರೀಡೆ ಮತ್ತು ಕಲೆಗಳಿಗೂ ಸಮಾನ ಅವಕಾಶ ನೀಡುತ್ತಿದೆ. ಇದರಿಂದಾಗಿ ನಮ್ಮ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿದ್ದಾರೆ ಎಂದು ಹೆಮ್ಮೆಯಿಂದ ನುಡಿದರು.
ಸಾಧಕರಿಗೆ ಸನ್ಮಾನ: “ವಿವೇಕ ವಿದ್ಯಾರ್ಥಿ-2025” ರಾಜ್ಯ ಮಟ್ಟದ ಪರೀಕ್ಷೆಯಲ್ಲಿ 10ನೇ ರ್ಯಾಂಕ್ ಪಡೆದ ವಂಶಿಕಾ ಹಾಗೂ ಜಿಲ್ಲಾ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಸಾತ್ವಿಕ್ ಕುಲಾಲ್ ಅವರನ್ನು ವಿಶೇಷವಾಗಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಮತ್ತು ಶಿಕ್ಷಣ ಪ್ರೇಮಿ ದಾನಿಗಳನ್ನು ಸನ್ಮಾನಿಸಲಾಯಿತು.
ಮುದ್ರಾಡಿ ಗ್ರಾ.ಪಂ. ಅಧ್ಯಕ್ಷೆ ವಸಂತಿ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಹರಿಪ್ರಸಾದ್ ಹೆಬ್ಬಾರ್ ಅವರು ‘ಮಕ್ಕಳ ಲೋಕ’ ಹಸ್ತಪ್ರತಿಯನ್ನು ಬಿಡುಗಡೆಗೊಳಿಸಿದರು. ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಸ್ವಾಗತಿಸಿದರೆ, ಶಿಕ್ಷಕ ಪಿ.ವಿ. ಆನಂದ್ ಕಾರ್ಯಕ್ರಮ ನಿರೂಪಿಸಿದರು. ಸಭೆಯ ನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ವೈವಿಧ್ಯಗಳು ಪ್ರದರ್ಶನಗೊಂಡವು.



































