
ಕಲಬುರಗಿ : ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿದೆ. ಇದರಿಂದಾಗಿ ಕಡಿಮೆ ದರದಲ್ಲಿ ಔಷಧಿಗಳನ್ನು ಪಡೆಯುತ್ತಿದ್ದ ಬಡ ರೋಗಿಗಳಿಗೆ ತಾತ್ಕಾಲಿಕವಾಗಿ ನಿರಾಳತೆ ಸಿಕ್ಕಂತಾಗಿದೆ.
ರಾಜ್ಯ ಸರ್ಕಾರದ ಈ ಆದೇಶದ ವಿರುದ್ಧ 16 ಜನ ಅರ್ಜಿದಾರರು ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಜನೌಷಧ ಕೇಂದ್ರಗಳ ಸ್ಥಾಪನೆಗೆ ಸಾಕಷ್ಟು ಮೂಲಸೌಕರ್ಯಗಳನ್ನು ಕಲ್ಪಿಸಲು ದೊಡ್ಡ ಪ್ರಮಾಣದ ಖರ್ಚು ತಗುಲಿದೆ. ಅಲ್ಲದೆ, ಈ ಕೇಂದ್ರಗಳು ಬಡ ರೋಗಿಗಳಿಗೆ ಶೇಕಡಾ 50 ರಿಂದ 96 ರಿಯಾಯಿತಿ ದರದಲ್ಲಿ ಔಷಧಿಗಳನ್ನು ಒದಗಿಸುತ್ತಿದ್ದು, ಸರ್ಕಾರದ ಆದೇಶದಿಂದಾಗಿ ಈ ಸೌಲಭ್ಯ ಕೈತಪ್ಪುತ್ತದೆ ಎಂಬುದು ಅರ್ಜಿದಾರರ ವಾದವಾಗಿತ್ತು. “ಸರ್ಕಾರದ ಆದೇಶದಿಂದ ನಮ್ಮ ಮೂಲಭೂತ ಹಕ್ಕಿಗೆ ಧಕ್ಕೆ ಆಗಿದೆ” ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು.
ಅರ್ಜಿದಾರರ ಮನವಿಯನ್ನು ಪರಿಗಣಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯವರೆಗೆ ಅರ್ಜಿದಾರರ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸದಂತೆ ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಈ ನಿರ್ಧಾರದಿಂದಾಗಿ ಜನೌಷಧ ಕೇಂದ್ರಗಳು ಸದ್ಯಕ್ಕೆ ಎಂದಿನಂತೆ ಕಾರ್ಯನಿರ್ವಹಿಸಲಿವೆ.