
ಹೊಸಕೋಟೆ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ದುರಂತವೊಂದು 7 ಮಂದಿಯ ಜೀವವನ್ನು ಬಲಿಪಡೆದಿದೆ. ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್, ಕಾರು ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಈ ಸಾವು-ನೋವು ಸಂಭವಿಸಿದೆ.
ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ XUV 700 ಕಾರು (ಸಂಖ್ಯೆ KA-03 NW-0138), ಕ್ಯಾಂಟರ್ ಮತ್ತು ಬೈಕ್ ನಡುವೆ ತೀವ್ರ ಸ್ವರೂಪದ ಡಿಕ್ಕಿ ಸಂಭವಿಸಿದೆ. ಈ ಭೀಕರ ಸಂಘರ್ಷದ ಪರಿಣಾಮವಾಗಿ ಕಾರಿನಲ್ಲಿದ್ದ 6 ಪ್ರಾಣಪಕ್ಷಿಗಳು ಸ್ಥಳದಲ್ಲೇ ಹಾರಿಹೋಗಿವೆ. ಇದರೊಂದಿಗೆ ಓರ್ವ ಬೈಕ್ ಸವಾರ ಕೂಡ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಮೃತರ ದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಸದ್ಯ ನಡೆಯುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತೀ ವೇಗ ಅಥವಾ ಚಾಲಕನ ನಿಯಂತ್ರಣ ತಪ್ಪಿದ್ದೇ ಈ ದುರಂತಕ್ಕೆ ಕಾರಣವೇ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತರ ಕುಟುಂಬಸ್ಥರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.



































