
ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸೆಪ್ಟೆಂಬರ್ 27ಕ್ಕೆ ನಡೆಯಲಿದೆ. ಈ ಸಂಬಂಧ ನ್ಯಾಯಾಲಯ ಸಹಾಯಕ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸಲು ನೋಟಿಸ್ ಜಾರಿಗೊಳಿಸಿದೆ.
ಪೊಲೀಸರ ಹುಡುಕಾಟ ತೀವ್ರ:
ಒಂದೆಡೆ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದರೆ, ಇನ್ನೊಂದೆಡೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಅವರು ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಬಾರಿ ಅವರ ಮನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಅಂಟಿಸಲಾಗಿದೆ. ಆದರೆ, ಅವರು ಇನ್ನೂ ಹಾಜರಾಗಿಲ್ಲ. ಹಾಗಾಗಿ ಪೊಲೀಸರು ನಾಳೆ (ಸೆಪ್ಟೆಂಬರ್ 26) ಮೂರನೇ ನೋಟಿಸ್ ಜಾರಿಗೊಳಿಸುವ ಸಾಧ್ಯತೆ ಇದೆ.
ಪುತ್ತೂರು ಸಹಾಯಕ ಕಮಿಷನರ್ ಅವರು ತಿಮರೋಡಿ ಗಡೀಪಾರಿಗೆ ಆದೇಶ ನೀಡಿರುವ ಕಾರಣ, ಬೆಳ್ತಂಗಡಿ ಪೊಲೀಸರು ಗಡೀಪಾರು ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ. ತಿಮರೋಡಿ ಉಜಿರೆಯ ಮನೆಯಲ್ಲಿ ಇಲ್ಲದ ಕಾರಣ, ಬೆಂಗಳೂರು ಮತ್ತು ಚಿಕ್ಕಮಗಳೂರಿನಲ್ಲಿ ತಲೆಮರೆಸಿಕೊಂಡಿರುವ ಶಂಕೆಯ ಮೇಲೆ ಪೊಲೀಸ್ ತಂಡಗಳು ಅಲ್ಲಿಗೆ ತೆರಳಿ ಶೋಧ ಕಾರ್ಯ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.



































