
ದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತಾ ಅಲರ್ಟ್ ಘೋಷಿಸಲಾಗಿದ್ದು, ಎಲ್ಲ ಸರ್ಕಾರಿ ನೌಕರರ ರಜೆಗಳನ್ನು ರದ್ದುಗೊಳಿಸಲಾಗಿದೆ. ಈಗಾಗಲೇ ರಜೆಯಲ್ಲಿ ಇದ್ದವರು ಕೂಡಲೇ ಕೆಲಸಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ.
ಇಂಡಿಯಾ ಗೇಟ್ ಸೇರಿದಂತೆ ಜನಸಂದಣಿಯ ಪ್ರದೇಶಗಳನ್ನು ತಾತ್ಕಾಲಿಕವಾಗಿ ಖಾಲಿ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ತುರ್ತು ಪರಿಸ್ಥಿತಿಗೆ ಸನ್ನದ್ಧವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು ತುರ್ತು ಸಭೆಗಳನ್ನು ನಡೆಸುತ್ತಿದ್ದಾರೆ.
ಲಾಹೋರ್ ದಾಳಿ ಬಳಿಕ ದೇಶದ ಭದ್ರತೆ ಬಿಗಿ
ಕಳೆದ ರಾತ್ರಿ ಪಾಕಿಸ್ತಾನ ಸೇನೆ ಭಾರತದ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್ಕೋಟ್, ಲೂಧಿಯಾನ, ಬಟಿಂಡಾ ಸೇರಿದಂತೆ ಹಲವೆಡೆ ದಾಳಿ ಯತ್ನಿಸಿ ವಿಫಲವಾಗಿದ್ದು, ತಕ್ಷಣ ಪ್ರತಿದಾಳಿ ನಡೆಸಿದ ಭಾರತ ಲಾಹೋರ್ನಲ್ಲಿನ ಪಾಕ್ ಸೇನಾ ನೆಲೆಗಳನ್ನು ನಾಶಮಾಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಭದ್ರತೆ ಏರ್ಪಡಿಸಲಾಗಿದೆ.
ಭದ್ರತಾ ವ್ಯವಸ್ಥೆಗಾಗಿ ಎಲ್ಲ ವಲಯಗಳ ವಿಶೇಷ ಆಯುಕ್ತರು 15 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಭೆ ನಡೆಸುತ್ತಿದ್ದು, ರಾತ್ರಿ ಗಸ್ತು ತಿರುಗುವಿಕೆಯೂ ತೀವ್ರಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.