
ಜೈಪುರ (ರಾಜಸ್ಥಾನ): ಎಲ್ಪಿಜಿ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಟ್ರಕ್ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸರಣಿ ಸಿಲಿಂಡರ್ ಸ್ಫೋಟಗೊಂಡು ಟ್ರಕ್ಗೆ ಬೆಂಕಿ ಹೊತ್ತಿಕೊಂಡ ಭೀಕರ ಘಟನೆ ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಪೊಲೀಸರ ಮಾಹಿತಿ ಪ್ರಕಾರ, ಮಿತಿಮೀರಿದ ವೇಗದಲ್ಲಿ ಬಂದ ಟ್ಯಾಂಕರ್, ಎಲ್ಪಿಜಿ ಟ್ರಕ್ಗೆ ಡಿಕ್ಕಿ ಹೊಡೆದ ಬಳಿಕ ಟ್ರಕ್ನೊಳಗಿದ್ದ ಸಿಲಿಂಡರ್ಗಳು ಒಂದರ ನಂತರ ಒಂದು ಸ್ಫೋಟಗೊಂಡಿವೆ. ಸ್ಫೋಟದ ರಭಸಕ್ಕೆ ಕೆಲವು ಸಿಲಿಂಡರ್ಗಳು ದೂರಕ್ಕೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಮತ್ತು ಹೊಗೆ ಆವರಿಸಿತ್ತು.
ಗಾಯಾಳುಗಳ ವಿವರ ಮತ್ತು ಸರ್ಕಾರದ ಮಧ್ಯಪ್ರವೇಶ
ಘಟನೆಯಲ್ಲಿ ಟ್ಯಾಂಕರ್ ಚಾಲಕ ಸೇರಿದಂತೆ ಎರಡರಿಂದ ಮೂರು ಮಂದಿ ಗಾಯಗೊಂಡಿದ್ದಾರೆ ಎಂದು ಜೈಪುರ ಐಜಿ ರಾಹುಲ್ ಪ್ರಕಾಶ್ ತಿಳಿಸಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರ ಸೂಚನೆಯ ಮೇರೆಗೆ ಉಪಮುಖ್ಯಮಂತ್ರಿ ಪ್ರೇಮ್ ಚಂದ್ ಬೈರವ ಅವರು ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದ್ದು, ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಉಪಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.



































