
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಮತ್ತು ಕಿಶ್ತ್ವಾರ್ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಒಟ್ಟು ಏಳು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ.
ಉಧಂಪುರದಲ್ಲಿ ಕಾರ್ಯಾಚರಣೆ
ಉಧಂಪುರದ ದುಡು ಬಸಂತ್ಗಢ್ ಹೈಟ್ನಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳು ಮೂರರಿಂದ ನಾಲ್ಕು ಭಯೋತ್ಪಾದಕರನ್ನು ಸುತ್ತುವರಿದಿವೆ. ನಿರ್ದಿಷ್ಟ ಮಾಹಿತಿಯ ಮೇರೆಗೆ ಸೇನೆ, ವಿಶೇಷ ಕಾರ್ಯಾಚರಣೆ ಪಡೆ (SOG) ಮತ್ತು ಪೊಲೀಸರ ಜಂಟಿ ತಂಡ ಕಾರ್ಯಾಚರಣೆ ಆರಂಭಿಸಿದೆ. ಈ ವೇಳೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಗಾಯಗೊಂಡಿದ್ದಾರೆ. ಸಿಕ್ಕಿಬಿದ್ದಿರುವ ಉಗ್ರರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (JeM) ಗೆ ಸೇರಿದವರು ಎಂದು ಶಂಕಿಸಲಾಗಿದೆ. ಸದ್ಯ ಕಾರ್ಯಾಚರಣೆ ಮುಂದುವರಿದಿದೆ ಎಂದು ಜಮ್ಮು ಐಜಿಪಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಕಿಶ್ತ್ವಾರ್ನಲ್ಲಿ ಉಗ್ರರ ಸೆರೆ
ಇದೇ ರೀತಿ, ಶುಕ್ರವಾರ ರಾತ್ರಿ ಕಿಶ್ತ್ವಾರ್ನಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ಭದ್ರತಾ ಪಡೆಗಳು ಇಬ್ಬರಿಂದ ಮೂವರು ಭಯೋತ್ಪಾದಕರನ್ನು ಸೆರೆ ಹಿಡಿದಿವೆ. ಗುಪ್ತಚರ ಮಾಹಿತಿ ಆಧಾರದ ಮೇಲೆ, ವೈಟ್ ನೈಟ್ ಕಾರ್ಪ್ಸ್ ಪಡೆಗಳು ರಾತ್ರಿ 8 ಗಂಟೆ ಸುಮಾರಿಗೆ ಭಯೋತ್ಪಾದಕರೊಂದಿಗೆ ಸಂಪರ್ಕ ಸಾಧಿಸಿ, ಕಾರ್ಯಾಚರಣೆ ನಡೆಸಿವೆ ಎಂದು ವೈಟ್ ನೈಟ್ ಕಾರ್ಪ್ಸ್ ತನ್ನ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.



































