
ಕಲಬುರಗಿ: ರಾಜ್ಯ ಶಾಸಕಾಂಗದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಪೂರ್ಣಗೊಳಿಸದೆ ಅರ್ಧಕ್ಕೆ ಕೈಬಿಟ್ಟು ನಿರ್ಗಮಿಸಿರುವುದು ಸಂವಿಧಾನಕ್ಕೆ ಎಸಗಿದ ಅಪಚಾರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಭಾಷಣ ಮುಗಿಯುವ ಮುನ್ನವೇ ಹಾಗೂ ರಾಷ್ಟ್ರಗೀತೆಗೆ ಗೌರವ ನೀಡದೆ ಹೊರನಡೆದ ರಾಜ್ಯಪಾಲರ ಧೋರಣೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದುದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, “ಸಚಿವ ಸಂಪುಟ ಅನುಮೋದಿಸಿದ ಭಾಷಣವನ್ನು ಓದುವುದು ರಾಜ್ಯಪಾಲರ ಸಾಂವಿಧಾನಿಕ ಕರ್ತವ್ಯ. ಅದರಲ್ಲಿ ಕೇಂದ್ರದ ವಿರುದ್ಧ ಯಾವುದೇ ಅವಹೇಳನಕಾರಿ ಅಂಶಗಳಿರಲಿಲ್ಲ. ಕೇವಲ ರಾಜ್ಯಕ್ಕೆ ಬರಬೇಕಾದ 15ನೇ ಹಣಕಾಸು ಆಯೋಗದ ಅನುದಾನ ಮತ್ತು ತೆರಿಗೆ ಪಾಲಿನ ಬಗ್ಗೆ ಉಲ್ಲೇಖಿಸಲಾಗಿತ್ತು. ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸತ್ಯಾಂಶಗಳನ್ನು ಮಂಡಿಸುವುದು ತಪ್ಪೇ?” ಎಂದು ಪ್ರಶ್ನಿಸಿದರು. ಬಿಜೆಪಿ ನಾಯಕರು ರಾಜ್ಯಪಾಲರ ಈ ನಡೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಅವರ ದ್ವಂದ್ವ ನೀತಿಯನ್ನು ತೋರಿಸುತ್ತದೆ. ರಾಷ್ಟ್ರಗೀತೆಗೆ ಅವಮಾನ ಮಾಡಿದಾಗ ಸುಮ್ಮನಿರುವ ಬಿಜೆಪಿಗರು ದೇಶಭಕ್ತಿಯ ಬಗ್ಗೆ ಮಾತನಾಡಲು ಅರ್ಹರಲ್ಲ ಎಂದು ಟೀಕಿಸಿದರು.
ಕೇಂದ್ರ ಸರ್ಕಾರದ ಹೊಸ ‘ವಿಬಿ ಜೀ ರಾಮ್ ಜೀ’ (VB-G RAM G) ಕಾಯ್ದೆಯು ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (MGNREGA) ಹಂತಹಂತವಾಗಿ ಕೊನೆಗಾಣಿಸುವ ಹುನ್ನಾರವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದರು. ಈ ಕಾಯ್ದೆಯು ದಲಿತರು, ಹಿಂದುಳಿದವರು ಮತ್ತು ಮಹಿಳೆಯರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಈ ಅಸಂವಿಧಾನಿಕ ಕಾಯ್ದೆಯ ವಿರುದ್ಧ ರಾಜ್ಯ ಸರ್ಕಾರವು ನ್ಯಾಯಾಲಯದ ಮೆಟ್ಟಿಲೇರಲು ನಿರ್ಧರಿಸಿದೆ ಎಂದು ಅವರು ಮಾಹಿತಿ ನೀಡಿದರು.
ಮಹಿಳಾ ಅಧಿಕಾರಿಗೆ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ತಪ್ಪಿತಸ್ಥ ರಾಜೀವ್ ಗೌಡರನ್ನು ಈಗಾಗಲೇ ಪಕ್ಷದಿಂದ ವಜಾ ಮಾಡಲಾಗಿದೆ. ಕಾನೂನು ತನ್ನ ಕೆಲಸ ಮಾಡಲಿದೆ. ಆದರೆ, ಬಿಜೆಪಿ ನಾಯಕರು ಮಹಿಳೆಯರ ಮತ್ತು ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಸುವ ಇತಿಹಾಸ ಹೊಂದಿದ್ದು, ನಮಗೆ ಸಂಸ್ಕೃತಿಯ ಪಾಠ ಮಾಡುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.



































