
ಬೆಂಗಳೂರು : ನಟ ಕಮಲ್ ಹಾಸನ್ ಅಭಿನಯದ ಚಿತ್ರ ಬಿಡುಗಡೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಕಮಲ್ ಹಾಸನ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲಿ ತಪ್ಪಿಲ್ಲ. ನಾವು ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದ್ದೇವೆ. ಬೆಂಗಳೂರು ಜಾತಿ, ಧರ್ಮ, ಸಂಸ್ಕೃತಿಗೆ ಮಿತಿ ಇಲ್ಲದೆ ಎಲ್ಲರನ್ನೂ ಸ್ವೀಕರಿಸುವ ಅಂತರರಾಷ್ಟ್ರೀಯ ನಗರವಾಗಿದೆ. ಕನ್ನಡಿಗರು ಹೃದಯ ಶ್ರೀಮಂತರು. ನಮ್ಮ ಭಾಷೆ, ಸಂಸ್ಕೃತಿಗೆ ಮೀರಿ ಯಾರನ್ನೂ ಕಾನೂನು ಕೈಗೆತ್ತಿಕೊಳ್ಳಲು ಬಿಡಬಾರದು,” ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಅವರು, ನ್ಯಾಯಾಲಯದ ಆದೇಶದ ವಿರುದ್ಧ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ಸೂಚಿಸಿದರು. ಚಿತ್ರ ಬಿಡುಗಡೆ ವಿಚಾರದಲ್ಲಿ ಶಾಂತಿಯುತವಾಗಿ ನಡೆದುಕೊಳ್ಳಬೇಕು ಎಂಬುವುದು ಅವರ ಮನವಿಯ ಸಾರಾಂಶವಾಗಿದೆ .
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿಯವರು ಕೂಡ ಪ್ರತಿಕ್ರಿಯೆ ನೀಡಿದ್ದು, “ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಗೌರವಿಸುತ್ತೇವೆ. ಆದರೆ ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆಯಾಗುವಂಥ ವಿಷಯಗಳಿಗೆ ಅವಕಾಶ ಕೊಡಲಿಕ್ಕೆ ಸಾಧ್ಯವಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಚಿತ್ರಮಂದಿರ ಮಾಲೀಕರು, ವಿತರಕರು ಹಾಗೂ ವಾಣಿಜ್ಯ ಮಂಡಳಿಯವರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗುತ್ತದೆ,” ಎಂದು ತಿಳಿಸಿದ್ದಾರೆ.