
ಕಾರ್ಕಳ: ಕೇಂದ್ರ ಸರ್ಕಾರದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (MGNREGA) ಆಮೂಲಾಗ್ರ ಬದಲಾವಣೆ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ ವತಿಯಿಂದ ಬೃಹತ್ ಪ್ರತಿಭಟನಾ ಪಾದಯಾತ್ರೆ ಆಯೋಜಿಸಲಾಗಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಕರೆಯಂತೆ ರಾಜ್ಯಾದ್ಯಂತ ನಡೆಯುತ್ತಿರುವ “ಮನ್ ರೇಗಾ ಬಚಾವೋ ಸಂಗ್ರಾಮ್” (MGNREGA ಉಳಿಸಿ ಹೋರಾಟ) ಅಭಿಯಾನದ ಭಾಗವಾಗಿ ಈ ಕಾರ್ಯಕ್ರಮ ರೂಪಿಸಲಾಗಿದೆ. ದಿನಾಂಕ 31/01/2026 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಕಾರ್ಕಳದ ಕಾಂಗ್ರೆಸ್ ಕಚೇರಿಯಿಂದ ಈ ‘ಗಾಂಧಿ ನಡಿಗೆ’ ಆರಂಭವಾಗಲಿದ್ದು, ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಸಾಗಲಿದೆ.
ಕೇಂದ್ರದ ಬಿ.ಜೆ.ಪಿ ಸರ್ಕಾರವು ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಮೂಲ ಆಶಯವನ್ನೇ ಮರೆಮಾಚಿ, ಹೊಸ ಕಾಯ್ದೆಯನ್ನು ತರುವ ಮೂಲಕ ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಹಳೆಯ ಯೋಜನೆಯನ್ನು ಯಥಾವತ್ತಾಗಿ ಮರು ಜಾರಿಗೆ ತರಬೇಕೆಂದು ಒತ್ತಾಯಿಸಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಹೋರಾಟದಲ್ಲಿ ಜಿಲ್ಲಾ ಮತ್ತು ಬ್ಲಾಕ್ ಸಮಿತಿಯ ಪದಾಧಿಕಾರಿಗಳು, ಪಂಚಾಯತ್ ಸದಸ್ಯರು, ಬೂತ್ ಸಮಿತಿ ಅಧ್ಯಕ್ಷರು ಹಾಗೂ ಬಿ. ಎಲ್. ಎ – 2 ಪ್ರತಿನಿಧಿಗಳು ಪಾಲುಗೊಳ್ಳಲಿದ್ದಾರೆ. ಸಾರ್ವಜನಿಕರು ಮತ್ತು ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕೇಂದ್ರದ ಜನವಿರೋಧಿ ನೀತಿಯ ವಿರುದ್ಧ ಧ್ವನಿ ಎತ್ತಲು ಮನವಿ ಮಾಡಲಾಗಿದೆ.



































