
ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ ಯೋಜನೆಯ ರೂಪರೇಷೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣವಾಗಿ ಬದಲಿಸಿದ್ದಾರೆ. ಇಂದು ಮಂಡಿಸಿದ 2026-27ನೇ ಸಾಲಿನ ಆಯವ್ಯಯದಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಸಿಹಿ ಸುದ್ದಿ ನೀಡಿರುವ ಸಿಎಂ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪೌಷ್ಟಿಕಾಂಶಯುಕ್ತ ‘ಇಂದಿರಾ ಆಹಾರ ಕಿಟ್’ ವಿತರಿಸುವ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಕೇವಲ ಅಕ್ಕಿ ನೀಡುವ ಬದಲು ಸಂಪೂರ್ಣ ಪೌಷ್ಟಿಕಾಂಶದ ಕಿಟ್ ನೀಡುವ ಮೂಲಕ ಬಡವರ ಅಡುಗೆ ಮನೆಗೆ ನೆರವಾಗುವುದು ಸರ್ಕಾರದ ಉದ್ದೇಶವಾಗಿದೆ.
ಈ ನೂತನ ‘ಇಂದಿರಾ ಆಹಾರ ಕಿಟ್’ನಲ್ಲಿ ದಿನನಿತ್ಯದ ಬಳಕೆಗೆ ಅಗತ್ಯವಾದ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆಯನ್ನು ಒಳಗೊಂಡಿರಲಿದೆ. ಈ ಬೃಹತ್ ಯೋಜನೆಗಾಗಿ ಸರ್ಕಾರ ಪ್ರಸಕ್ತ ಹಣಕಾಸು ವರ್ಷದಲ್ಲಿ ಒಟ್ಟು 6,200 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಕಳೆದ 3 ವರ್ಷಗಳಲ್ಲಿ ಅನ್ನಭಾಗ್ಯ ಯೋಜನೆಗಾಗಿ ಬರೋಬ್ಬರಿ 17,167 ಕೋಟಿ ರೂ.ಗಳನ್ನು ವ್ಯಯಿಸಲಾಗಿದ್ದು, ಇದರಿಂದ ರಾಜ್ಯದ ಸುಮಾರು 4.54 ಕೋಟಿ ಜನರು ಪ್ರಯೋಜನ ಪಡೆದಿದ್ದಾರೆ ಎಂದು ಸಿಎಂ ಅಂಕಿಅಂಶಗಳ ಸಮೇತ ವಿವರಿಸಿದರು.
ಆಹಾರ ಧಾನ್ಯಗಳ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಸಗಟು ಮತ್ತು ಚಿಲ್ಲರೆ ಲಾಭಾಂಶವನ್ನು ನೇರವಾಗಿ ಪಾವತಿಸುವ ಹೊಸ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ. ಇದರೊಂದಿಗೆ ರಾಜ್ಯದ ವಿವಿಧ 274 ಕಲ್ಯಾಣ ಸಂಸ್ಥೆಗಳ ಫಲಾನುಭವಿಗಳಿಗೆ ಈಗಾಗಲೇ ಆಹಾರ ಭದ್ರತೆ ಒದಗಿಸಲಾಗುತ್ತಿದ್ದು, ಈ ವರ್ಷ ಹೆಚ್ಚುವರಿಯಾಗಿ 34 ಹೊಸ ಸಂಸ್ಥೆಗಳ 6,701 ಸದಸ್ಯರಿಗೂ ಯೋಜನೆಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ. ಹಸಿವು ಮುಕ್ತ ಕರ್ನಾಟಕದ ಜೊತೆಗೆ ಪೌಷ್ಟಿಕಾಂಶ ಭರಿತ ರಾಜ್ಯವನ್ನಾಗಿ ಮಾಡುವುದು ಈ ಬದಲಾವಣೆಯ ಹಿಂದಿನ ಗುರಿಯಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.




































