
ಕಲಬುರಗಿ: ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ಮುಂದಿನ ಎರಡು ತಿಂಗಳ ಅವಧಿಯಲ್ಲಿ ಸುಮಾರು 3 ಲಕ್ಷ ಹೊಸ ಪಡಿತರ ಚೀಟಿಗಳನ್ನು ವಿತರಿಸಲಾಗುವುದು ಎಂದು ಘೋಷಿಸಿದ್ದಾರೆ.
ಕಲಬುರಗಿಯಲ್ಲಿ ಜನವರಿ 13ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಕಾರಣಗಳು ಹಾಗೂ ಕಾರ್ಡ್ಗಳ ಪರಿಷ್ಕರಣೆ ಪ್ರಕ್ರಿಯೆಯಿಂದಾಗಿ ಕಳೆದ ಎರಡೂವರೆ ವರ್ಷಗಳಿಂದ ಬಾಕಿ ಉಳಿದಿದ್ದ ಹೊಸ ಅರ್ಜಿಗಳ ವಿಲೇವಾರಿಗೆ ಸರ್ಕಾರ ಚಾಲನೆ ನೀಡಿದೆ ಎಂದು ತಿಳಿಸಿದರು. ಸದ್ಯ ಇಲಾಖೆಯ ಬಳಿ ಸುಮಾರು 2.5 ರಿಂದ 3 ಲಕ್ಷ ಅರ್ಜಿಗಳು ಬಾಕಿ ಇದ್ದು, ಇವುಗಳ ಸಂಪೂರ್ಣ ಪರಿಶೀಲನೆ ನಡೆಸಿ ಅರ್ಹರಿಗೆ ಶೀಘ್ರವೇ ಕಾರ್ಡ್ ತಲುಪಿಸಲಾಗುವುದು ಎಂದರು.
ಇದೇ ವೇಳೆ ಹೊಸ ಪಡಿತರ ಚೀಟಿಗಾಗಿ ಕಾಯುತ್ತಿರುವವರಿಗೆ ಮಾಹಿತಿ ನೀಡಿದ ಸಚಿವರು, “ಬಾಕಿ ಇರುವ ಅರ್ಜಿಗಳ ವಿತರಣೆ ಪ್ರಕ್ರಿಯೆಯು ಜನವರಿ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಈ ಪ್ರಕ್ರಿಯೆ ಮುಗಿದ ತಕ್ಷಣ, ಅಂದರೆ ಫೆಬ್ರವರಿ ತಿಂಗಳಿನಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುವುದು,” ಎಂದು ಸ್ಪಷ್ಟಪಡಿಸಿದರು. ಸರ್ಕಾರದ ಈ ನಿರ್ಧಾರದಿಂದಾಗಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗಳ ನಿರೀಕ್ಷೆಯಲ್ಲಿದ್ದ ಜನಸಾಮಾನ್ಯರಿಗೆ ದೊಡ್ಡ ಮಟ್ಟದ ನೆಮ್ಮದಿ ಸಿಕ್ಕಂತಾಗಿದೆ.



































