
ಕುಂದಾಪುರ: ತಾಲೂಕಿನ ಹೆಮ್ಮಾಡಿ–ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಸಮೀಪದ ಶಾರ್ಕೆ ಕ್ರಾಸ್ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಚಲಿಸುತ್ತಿದ್ದ ಕಾರೊಂದು ಸಂಪೂರ್ಣ ಸುಟ್ಟು ಕರಕಲಾಗಿದೆ. ಸಮಯಪ್ರಜ್ಞೆ ಮೆರೆದ ಚಾಲಕ ತಕ್ಷಣ ಕಾರಿನಿಂದ ಕೆಳಗಿಳಿದ ಕಾರಣ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.
ಬೀಜಾಡಿ ನಿವಾಸಿ ಭಾಸ್ಕರ್ ಆಚಾರ್ ಎಂಬುವರು ಈ ಘಟನೆಯಿಂದ ಪಾರಾದವರು. ಬೆಳಿಗ್ಗೆ ಆಲೂರಿಗೆ ತೆರಳಿ ಕೆಲಸ ಮುಗಿಸಿಕೊಂಡು ಸುಮಾರು 10 ಗಂಟೆಯ ವೇಳೆಗೆ ಕುಂದಾಪುರದ ಕಡೆಗೆ ಮರಳುತ್ತಿದ್ದರು. ಈ ವೇಳೆ ವಂಡ್ಸೆ ಸಮೀಪದ ಶಾರ್ಕೆ ಕ್ರಾಸ್ ತಲುಪುತ್ತಿದ್ದಂತೆ ಕಾರಿನ ಎಂಜಿನ್ ಭಾಗದಿಂದ ವಿಚಿತ್ರ ಶಬ್ದದೊಂದಿಗೆ ದಟ್ಟವಾದ ಹೊಗೆ ಹೊರಬರತೊಡಗಿದೆ.
ತಕ್ಷಣವೇ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ ಭಾಸ್ಕರ್ ಆಚಾರ್ ಅವರು ಹೊರಗೆ ಬಂದಿದ್ದಾರೆ. ಅವರು ಕೆಳಗಿಳಿಯುತ್ತಿದ್ದಂತೆಯೇ ಬೆಂಕಿ ಕಾರಿನಾದ್ಯಂತ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಸ್ಥಳೀಯರು ಕೂಡಲೇ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ, ಗಾಳಿಯ ರಭಸಕ್ಕೆ ಬೆಂಕಿ ನಿಯಂತ್ರಣಕ್ಕೆ ಬಾರದೆ ಇಡೀ ವಾಹನ ಅಗ್ನಿಗೆ ಆಹುತಿಯಾಯಿತು.
ಪ್ರಾಥಮಿಕ ಮಾಹಿತಿ ಪ್ರಕಾರ, ಕಾರಿನ ಎಲೆಕ್ಟ್ರಿಕಲ್ ವೈರಿಂಗ್ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಕೊಲ್ಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.



































