
ಕುಂದಾಪುರ : ಕಾಲೇಜು ವಿದ್ಯಾರ್ಥಿಗಳನ್ನು ಎನ್ಎಸ್ಎಸ್ (NSS) ಶಿಬಿರಕ್ಕೆ ಕರೆದೊಯ್ಯುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಹಳ್ಳಿಹೊಳೆ ಸಮೀಪದ ಶೆಟ್ಟಿಪಾಲು ಎಂಬಲ್ಲಿ ಸೋಮವಾರ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಳ್ಳಿಹೊಳೆ ಗ್ರಾಮದ ಸುಳಗೊಡು ಶಾಲೆಯಲ್ಲಿ ಆಯೋಜಿಸಲಾಗಿದ್ದ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಬಸ್ಸಿನಲ್ಲಿ ತೆರಳುತ್ತಿದ್ದರು. ಬಸ್ಸು ಶೆಟ್ಟಿಪಾಲು ಎಂಬಲ್ಲಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ.
ಬಸ್ಸು ಉರುಳುವ ಸಂದರ್ಭದಲ್ಲಿ ಅಲ್ಲಿಯೇ ಇದ್ದ ತೆಂಗಿನ ಮರವೊಂದಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಒಂದು ವೇಳೆ ಮರ ಅಡ್ಡ ಬರದೇ ಇದ್ದಲ್ಲಿ ಬಸ್ಸು ಆಳಕ್ಕೆ ಉರುಳಿ ದೊಡ್ಡ ಮಟ್ಟದ ಪ್ರಾಣಾಪಾಯ ಸಂಭವಿಸುವ ಸಾಧ್ಯತೆಯಿತ್ತು. ತೆಂಗಿನ ಮರವು ಬಸ್ಸಿನ ವೇಗವನ್ನು ತಡೆದಿದ್ದರಿಂದ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಕೇವಲ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಈ ಘಟನೆಗೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.



































