
ಉಡುಪಿ :ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಶುಭಾಶೀರ್ವಾದದೊಂದಿಗೆ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಮಾರ್ಗದರ್ಶನದಲ್ಲಿ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ.
ನವೆಂಬರ್ 8 ರಿಂದ 30, 2025ರ ವರೆಗೆ ನಡೆಯಲಿರುವ “ಲಕ್ಷ ಕಂಠ ಗೀತ ಗಾಯನ” ಹಾಗೂ “ಗೀತಾ ಭಜನೋತ್ಸವ” ಕುರಿತು ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.
ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಸಹಯೋಗದಲ್ಲಿ ಈ ಕಾರ್ಯಕ್ರಮವು “ಗೀತ ಭಜನೋತ್ಸವ” ಹಾಗೂ “ಸಂತ ಸಮಾವೇಶ” ಶೀರ್ಷಿಕೆಯಡಿಯಲ್ಲಿ ಜರುಗಲಿದೆ.
ನವೆಂಬರ್ 8ರಂದು ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಪ್ರತಿದಿನ ಸಂಜೆ 4.00 ರಿಂದ 6.00ರ ವರೆಗೆ ಜಿಲ್ಲೆಯ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮಗಳು ನಡೆಯಲಿವೆ.
ನವೆಂಬರ್ 30ರಂದು ವಿನೂತನ ಸಮಾರೋಪ:
ನವೆಂಬರ್ 30ರಂದು ಸುಮಾರು 40 ರಿಂದ 50 ಸಾವಿರಕ್ಕೂ ಅಧಿಕ ಭಕ್ತಾದಿಗಳು ಸೇರುವ ನಿರೀಕ್ಷೆಯಿದ್ದು, ದೇಶದ ಪ್ರಮುಖ ಗಣ್ಯರು, ಸಂತರು ಹಾಗೂ ಧಾರ್ಮಿಕ ಮುಖಂಡರ ಉಪಸ್ಥಿತಿಯಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ.
ಸಭೆಯಲ್ಲಿ ಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ಭಜನಾ ತರಬೇತುದಾರೆ ವಿದುಷಿ ಉಷಾ ಹೆಬ್ಬಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ರಾಜ್ಯ ಭಜನಾ ಪರಿಷತ್ತಿನ ಎಲ್ಲಾ ತಾಲೂಕುಗಳ ಪದಾಧಿಕಾರಿಗಳು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರ ಸಭೆಯನ್ನು ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.



































