
ಕಾರ್ಕಳ : ಕಾರ್ಕಳ ಪುರಸಭೆ ಕಚೇರಿಗೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ, ಅಲ್ಲಿನ ಕಡತಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು. ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ಈ ಪರಿಶೀಲನೆ ನಡೆದಿದೆ.
ದೂರುಗಳ ಹಿನ್ನೆಲೆ ಹಾಗೂ ಪರಿಶೀಲನೆ
ಸಾರ್ವಜನಿಕರ ದೂರುಗಳೆಂದರೆ, ವಿವಿಧ ಕಾಮಗಾರಿಗಳನ್ನು ಕೈಗೊಂಡ ಗುತ್ತಿಗೆದಾರರಿಗೆ ಬಿಲ್ ಪಾವತಿ ಬಾಕಿ ಉಳಿದಿರುವುದು, ಖಾತಾ ವರ್ಗಾವಣೆ, ಜನನ-ಮರಣ ಪ್ರಮಾಣ ಪತ್ರ ವಿತರಣೆ, ಉದ್ದಿಮೆ ಪರವಾನಗಿ ಸೇರಿದಂತೆ ಇತರೆ ಸೇವೆಗಳನ್ನು ನೀಡುವಲ್ಲಿ ಆಗುತ್ತಿರುವ ವಿಳಂಬಗಳ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಈ ದೂರುಗಳ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪುರಸಭೆ ಕಚೇರಿಯ ಎಲ್ಲಾ ವಿಭಾಗಗಳ ಕಡತಗಳನ್ನು ಪರಿಶೀಲಿಸಿದರು. ಬಾಕಿ ಉಳಿದಿರುವ ಕಡತಗಳು ಮತ್ತು ವಿಳಂಬದ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು.
ತಾಲೂಕು ಕಚೇರಿಗೂ ಭೇಟಿ
ಪುರಸಭೆ ಕಚೇರಿ ಮಾತ್ರವಲ್ಲದೆ, ಲೋಕಾಯುಕ್ತ ತಂಡ ತಾಲೂಕು ಕಚೇರಿಯ ರೆಕಾರ್ಡ್ ರೂಮ್ಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ, ಕಳೆದ ಹತ್ತು ತಿಂಗಳಿನಿಂದ ಬಾಕಿ ಉಳಿದಿದ್ದ ಪ್ರಮುಖ ಫೈಲ್ ಒಂದನ್ನು ಪತ್ತೆ ಹಚ್ಚಿ, ಅದರ ಬಗ್ಗೆ ವಿಚಾರಣೆ ನಡೆಸಲಾಯಿತು. ಈ ಪರಿಶೀಲನೆಗೆ ಸಂಬಂಧಿಸಿದಂತೆ ಸಮಗ್ರ ವರದಿಯನ್ನು ಲೋಕಾಯುಕ್ತರಿಗೆ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕರ ಕೆಲಸಗಳು ತ್ವರಿತವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು ಎಂದು ಲೋಕಾಯುಕ್ತ ಅಧಿಕಾರಿಗಳು ಪುರಸಭೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಾಕೀತು ಮಾಡಿದರು.