
ಶಿವಮೊಗ್ಗ: ಪ್ರೀತಿಯ ವಿಚಾರದಲ್ಲಿ ಮನೆಯವರ ವಿರೋಧಕ್ಕೆ ಮನನೊಂದು ಯುವ ಜೋಡಿಯೊಂದು ಆತ್ಮಹತ್ಯೆಗೆ ಯತ್ನಿಸಿರುವ ದುರಂತ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯುವತಿ ಸಾವನ್ನಪ್ಪಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಅಂತರಗಂಗೆಯ ಭೋವಿ ಕಾಲೋನಿ ನಿವಾಸಿಗಳಾದ ಸ್ವಾತಿ (19) ಮತ್ತು ಸೂರ್ಯ (20) ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು. ಈ ವಿಷಯ ಕುಟುಂಬಸ್ಥರಿಗೆ ತಿಳಿದು, ಅವರ ವಿವಾಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಪ್ರೇಮಿಗಳು ಮೊದಲು ಇರುವೆ ಪುಡಿ ಸೇವಿಸಿ, ನಂತರ ಅಂತರಗಂಗೆಯ ಉಕ್ಕುಂದದ ಕಾಲುವೆಗೆ ಹಾರಿದ್ದಾರೆ.
ಸೂರ್ಯ ಮರದ ದಿಮ್ಮಿಯೊಂದನ್ನು ಹಿಡಿದು ಪ್ರಾಣ ಉಳಿಸಿಕೊಂಡಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಯಾದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸ್ವಾತಿ ದುರಂತವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಆಕೆಯ ಮೃತದೇಹವನ್ನು ಕಾಲುವೆಯಿಂದ ಹೊರತೆಗೆಯಲಾಗಿದೆ. ಈ ದುರಂತಕ್ಕೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



































