
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಸಮೀಪದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂರು ಬಸ್ಸುಗಳು ಡಿಕ್ಕಿಯಾಗಿದ್ದು, ಈ ದುರಂತದಲ್ಲಿ ಮೂವರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಂಭೀರವಾಗಿ ಗಾಯಗೊಂಡಿರುವವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.
ಮಳವಳ್ಳಿ ಮಾರ್ಗವಾಗಿ ಮಹದೇಶ್ವರನ ಬೆಟ್ಟಕ್ಕೆ ತೆರಳುತ್ತಿದ್ದ ಒಂದು ಕೆಎಸ್ಆರ್ಟಿಸಿ ಬಸ್ ಮತ್ತು ಕೊಳ್ಳೆಗಾಲ ಕಡೆಯಿಂದ ಮಳವಳ್ಳಿಗೆ ಬರುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ ನಡುವೆ ಮೊದಲು ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಎರಡು ಬಸ್ಸುಗಳು ಡಿಕ್ಕಿಯಾಗಿ ನಿಂತಿದ್ದ ಸಂದರ್ಭದಲ್ಲಿಯೇ ಮತ್ತೊಂದು ಬಸ್ ಬಂದು ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ 30ಕ್ಕೂ ಹೆಚ್ಚು ಮಂದಿಯಲ್ಲಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಹಿಳೆ ಹಾಗೂ ಒಬ್ಬ ಪುರುಷ ಸಾವನ್ನಪ್ಪಿದ್ದಾರೆ. ಮೃತರ ವಿವರ ಮತ್ತು ಮಾಹಿತಿ ಲಭ್ಯವಾಗಿಲ್ಲ, ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಮಳವಳ್ಳಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಗಾಯಗೊಂಡವರನ್ನು ಸೂಕ್ತ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.




































