
ಮಂಗಳೂರು: ಮಂಗಳೂರು ನಗರದ ಹೃದಯ ಭಾಗವಾದ ಲಾಲ್ ಬಾಗ್ ಪ್ರದೇಶದಲ್ಲಿನ ಅಪಾರ್ಟ್ಮೆಂಟ್ ಒಂದಕ್ಕೆ ನುಗ್ಗಿ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಹಾಗೂ ವಿದೇಶಿ ಕರೆನ್ಸಿ ಸೇರಿ ಹಲವು ವಸ್ತುಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರು ಅಂತರರಾಜ್ಯ ಕಳ್ಳರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಅಸ್ಸಾಂ ರಾಜ್ಯದ ಕಾಚಾರ್ ಜಿಲ್ಲೆಗೆ ಸೇರಿದ ಅಭಿಜಿತ್ ದಾಸ್ (24) ಮತ್ತು ದೇಬಾ ದಾಸ್ (21) ಬಂಧಿತ ಆರೋಪಿಗಳಾಗಿದ್ದಾರೆ. ಇವರ ಪೈಕಿ ಪ್ರಮುಖ ಆರೋಪಿ ಅಭಿಜಿತ್ ದಾಸ್ ಮೇಲೆ ಈ ಹಿಂದೆ ಬೆಂಗಳೂರು ಹಾಗೂ ಅಸ್ಸಾಂನಲ್ಲಿ ಸಹ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.
ಅಕ್ಟೋಬರ್ 19 ಮತ್ತು 20ರ ರಾತ್ರಿ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲ್ ಗ್ರಾಮದ ಲಾಲ್ ಬಾಗ್ ಹ್ಯಾಟ್ ಹಿಲ್ನಲ್ಲಿರುವ ಅಪಾರ್ಟ್ಮೆಂಟ್ನ ಮೂರು ಫ್ಲಾಟ್ಗಳಿಗೆ ನುಗ್ಗಿದ ಕಳ್ಳರು ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, 5000/- ರೂಪಾಯಿ ನಗದು, 3000 ದಿರ್ಹಂ (ಸುಮಾರು 70,000/- ರೂಪಾಯಿ ಮೌಲ್ಯ) ಹಾಗೂ ಮೊಬೈಲ್ ಫೋನ್ಗಳನ್ನು ಕಳವು ಮಾಡಿದ್ದರು. ಈ ಬಗ್ಗೆ ರಿಯಾಜ್ ರಶೀದ್ ಎಂಬುವವರು ಅಕ್ಟೋಬರ್ 20ರಂದು ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ದಾಖಲಾದ ತಕ್ಷಣ ಕಾರ್ಯಪ್ರವೃತ್ತರಾದ ಹಿರಿಯ ಪೊಲೀಸ್ ಅಧಿಕಾರಿಗಳು, ಉರ್ವಾ ಠಾಣೆಯ ಠಾಣಾಧಿಕಾರಿ ಮತ್ತು ಸಿಬ್ಬಂದಿ ವರ್ಗದವರು, ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರ ತಂಡದೊಂದಿಗೆ ಸ್ಥಳ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿತು. ಪ್ರಕರಣ ದಾಖಲಾದ ಕೇವಲ 20 ಗಂಟೆಗಳ ಒಳಗಾಗಿಯೇ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಅಕ್ಟೋಬರ್ 21ರ ಬೆಳಗಿನ ಜಾವ ಬೆಂಗಳೂರು ನಗರ ಪೊಲೀಸರ ಸಹಕಾರದೊಂದಿಗೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಎಲ್ಲಾ ಚಿನ್ನಾಭರಣಗಳು, 5000/- ರೂಪಾಯಿ ನಗದು, 3000 ದಿರ್ಹಂ ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗುವುದು ಮತ್ತು ಇತರೆ ಕಳ್ಳತನ ಪ್ರಕರಣಗಳಲ್ಲಿ ಇವರ ಪಾತ್ರದ ಕುರಿತು ತನಿಖೆ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ. ಡಿಸಿಪಿ ಕ್ರೈಂ ಅವರ ಮಾರ್ಗದರ್ಶನದಲ್ಲಿ ಕೇಂದ್ರ ಉಪ ವಿಭಾಗದ ಎಸಿಪಿ, ಉರ್ವಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯ ತಂಡ ಈ ಯಶಸ್ವಿ ಕಾರ್ಯಾಚರಣೆಯನ್ನು ನಿರ್ವಹಿಸಿದೆ.




































