
ಮಂಗಳೂರು : ನಗರದ ಮೀನುಗಾರಿಕೆ ಧಕ್ಕೆಯಲ್ಲಿ ಮಂಗಳವಾರ ಸಂಭವಿಸಿದ ಆಘಾತಕಾರಿ ಘಟನೆಯಲ್ಲಿ, ಲೈಟ್ ಕಂಬವೊಂದು ಮುರಿದು ಬಿದ್ದ ಪರಿಣಾಮ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಎಂಬವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮಂಗಳೂರು ಮೀನುಗಾರಿಕೆ ಧಕ್ಕೆಯಲ್ಲಿ ಹಲವು ವರ್ಷಗಳಿಂದ ಹೊರೆ ಹೊರುವ ಕಾರ್ಮಿಕನಾಗಿ ದುಡಿಯುತ್ತಿದ್ದ ಮುರುಗನ್ (45), ತಮಿಳುನಾಡಿನ ಸೇಲಂ ಮೂಲದವರು. ಮಂಗಳವಾರ ಎಂದಿನಂತೆ ಕೆಲಸ ಮುಗಿಸಿ ಮೀನು ಹೊತ್ತು ಬಂದು ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ, ತುಕ್ಕು ಹಿಡಿದಿದ್ದ ಹಳೆಯ ಲೈಟ್ ಕಂಬವೊಂದು ಅಡಿಭಾಗದಿಂದ ಮುರಿದು ನೇರವಾಗಿ ಇವರ ಮೇಲೆ ಬಿದ್ದಿದೆ. ಕಂಬವು ಮುರುಗನ್ ಅವರ ತಲೆಯ ಹಿಂಭಾಗಕ್ಕೆ ಬಲವಾಗಿ ಬಡಿದಿದ್ದರಿಂದ ಗಂಭೀರ ಗಾಯಗಳಾಗಿ, ಆಸ್ಪತ್ರೆಗೆ ಸಾಗಿಸುವ ಮೊದಲೇ ಅವರು ಮೃತಪಟ್ಟಿದ್ದಾರೆ. ಈ ವೇಳೆ ಸಮೀಪದಲ್ಲಿದ್ದ ಬಾಬು ಎಂಬುವವರು ಸೇರಿದಂತೆ ಇತರ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಧಕ್ಕೆಯ ನೂರಾರು ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಬಳಿ ಜಮಾಯಿಸಿದರು. ಮೃತ ಮುರುಗನ್ ಅವರು ಕುಟುಂಬದ ಏಕೈಕ ಆಧಾರವಾಗಿದ್ದು, ಅವರಿಗೆ ಪತ್ನಿ ಹಾಗೂ ಮೂವರು ಮಕ್ಕಳಿದ್ದಾರೆ (2 ಗಂಡು, 1 ಹೆಣ್ಣು). ಇವರ ಸಾವು ಕುಟುಂಬವನ್ನು ಬೀದಿಗೆ ತಳ್ಳಿದ್ದು, ಕಾರ್ಮಿಕರು ಕಣ್ಣೀರು ಹಾಕುತ್ತಾ ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ. ಧಕ್ಕೆಯಲ್ಲಿ ತುಕ್ಕು ಹಿಡಿದ ಕಂಬಗಳನ್ನು ಬದಲಾಯಿಸದೆ ಅಧಿಕಾರಿಗಳು ತೋರಿದ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿದ DYFI ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮತ್ತಿತರರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಶವಪರೀಕ್ಷೆಯ ನಂತರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಅವರ ಸ್ವಗ್ರಾಮಕ್ಕೆ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ.



































