
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ನಿಯಂತ್ರಣ ತಪ್ಪಿ ರಾಜ ಕಾಲುವೆಗೆ ಬಿದ್ದ ಪರಿಣಾಮವಾಗಿ ಕಾರು ಚಾಲಕನಾಗಿದ್ದ ಫೋಟೋಗ್ರಾಫರ್ ಸಾವನ್ನಪ್ಪಿದ್ದಾರೆ.
ಮೃತರನ್ನು ಪಣಂಬೂರು ಬಳಿಯ ಸೂರ್ಯ ನಾರಾಯಣ (48) ಎಂದು ಗುರುತಿಸಲಾಗಿದೆ. ಅವರು ನಂದೀಕೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಫೋಟೋಗ್ರಾಫಿಗಾಗಿ ತೆರಳುತ್ತಿದ್ದರು. ಈ ವೇಳೆ ಕೋಡಿಕಲ್ ಕ್ರಾಸ್ ಬಳಿ ಕಾರಿನ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ರಾಜ ಕಾಲುವೆಗೆ ಬಿದ್ದಿದೆ.
ಅಪಘಾತದ ನಂತರ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಕ್ಕೆ ಧಾವಿಸಿ ಗಂಭೀರವಾಗಿ ಗಾಯಗೊಂಡ ಸೂರ್ಯ ನಾರಾಯಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಆದರೆ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಅಪಘಾತದ ಸ್ಥಳದಲ್ಲಿ ಆಗಾಗ್ಗೆ ಕಾಲುವೆ ಶುದ್ಧೀಕರಣ ಹಾಗೂ ಪೊದೆಗಳ ಕಡಿತ ಕಾರ್ಯ ನಡೆಯುತ್ತಿದ್ದು, ರಸ್ತೆ ಬದಿಯು ಅಪಾಯಕಾರಿಯಾಗಿ ಬದಲಾದ ಹಿನ್ನೆಲೆ ಈ ದುರಂತ ಸಂಭವಿಸಿದ್ದಾಗಿದೆ. ಕಾರು ತೀವ್ರ ವೇಗದಲ್ಲಿದ್ದ ಕಾರಣ ನಿಯಂತ್ರಣ ತಪ್ಪಿದ ಸಾಧ್ಯತೆ ಇದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.