
ಮೂಡುಬಿದಿರೆ : ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಇಂದು (ಶನಿವಾರ) ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಗಾಯಗೊಂಡ ಮಹಿಳೆಯನ್ನು ವರ್ಣಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಾರ್ಯದರ್ಶಿ ಹಾಗೂ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಎಂದು ಗುರುತಿಸಲಾಗಿದೆ. ಅವರ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ರಾಮ್ ಮೋಹನ ನಗರ ನಿವಾಸಿ ರಾಜೇಶ್ ನಾಯ್ಕ್ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಆರೋಪಿ ರಾಜೇಶ್ ನಾಯ್ಕ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.













