
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಸ್ಥರ ವಿರುದ್ಧದ ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸಲು ವಿಳಂಬ ಮಾಡುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ಕೋರ್ಟ್ ಅಸಮಾಧಾನಕ್ಕೆ ಕಾರಣವೇನು?
ಈ ಹಿಂದೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಡಿ. 18ರೊಳಗೆ ಅಂತಿಮ ವರದಿ ಸಲ್ಲಿಸುವಂತೆ ಕೋರ್ಟ್ ಸೂಚಿಸಿತ್ತು. ಆದರೆ, ಗುರುವಾರ ವಿಚಾರಣೆ ವೇಳೆ ಲೋಕಾಯುಕ್ತ ಪೊಲೀಸರು, “ತನಿಖೆ ಅಂತಿಮ ಹಂತದಲ್ಲಿದೆ, ಅಧಿಕಾರಿಗಳ ವಿಚಾರಣೆಗೆ ಪ್ರಾಸಿಕ್ಯೂಷನ್ ಅನುಮತಿ ಬೇಕಿದೆ” ಎಂಬ ಕಾರಣ ನೀಡಿ 19 ಪುಟಗಳ ಮಧ್ಯಂತರ ವರದಿ ಸಲ್ಲಿಸಿ ಮತ್ತೆ ಕಾಲಾವಕಾಶ ಕೋರಿದರು.
ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, “ತನಿಖೆಗೆ ಇನ್ನೆಷ್ಟು ಕಾಲಾವಕಾಶ ನೀಡಬೇಕು? ಅಂತಿಮ ವರದಿ ಸಲ್ಲಿಸಲು ವಿಫಲವಾದರೆ ಲಭ್ಯವಿರುವ ದಾಖಲೆಗಳ ಆಧಾರದ ಮೇಲೆಯೇ ಬಿ-ರಿಪೋರ್ಟ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಮುಚ್ಚಿದ ಲಕೋಟೆಯಲ್ಲಿ ಕೇಸ್ ಡೈರಿ ನೀಡಲು ಆದೇಶ
ಲೋಕಾಯುಕ್ತ ಪೊಲೀಸರ ತನಿಖೆಯ ವೇಗದ ಬಗ್ಗೆ ಬೇಸರ ವ್ಯಕ್ತಪಡಿಸಿದ ನ್ಯಾಯಾಲಯ, ಇದುವರೆಗಿನ ತನಿಖೆಯ ‘ಕೇಸ್ ಡೈರಿ’ಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಆದೇಶಿಸಿದೆ. ಅಲ್ಲದೆ, ಬಿ-ರಿಪೋರ್ಟ್ ಬಗ್ಗೆ ಹೆಚ್ಚುವರಿ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಜಾರಿ ನಿರ್ದೇಶನಾಲಯದ (ED) ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಡಿಸೆಂಬರ್ 23ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ:
ಮೈಸೂರಿನ ವಿಜಯನಗರ ಲೇಔಟ್ನಲ್ಲಿ ಭೂಮಿ ಕಳೆದುಕೊಂಡಿದ್ದಕ್ಕಾಗಿ ಸಿಎಂ ಪತ್ನಿ ಪಾರ್ವತಿ ಅವರಿಗೆ 14 ಬದಲಿ ನಿವೇಶನಗಳನ್ನು ಮಂಜೂರು ಮಾಡಲಾಗಿತ್ತು. ಇದು ನಿಯಮಬಾಹಿರ ಮತ್ತು ಭೂಮಿಯ ಮೌಲ್ಯಕ್ಕಿಂತ ಹೆಚ್ಚಿನ ಮೌಲ್ಯದ ನಿವೇಶನ ನೀಡಲಾಗಿದೆ ಎಂಬ ಆರೋಪದ ಮೇಲೆ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ವಿರುದ್ಧ ದೂರು ನೀಡಿದ್ದರು.




































