
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನ್ಯಾಯಾಲಯದಲ್ಲಿ ದೊಡ್ಡ ಮಟ್ಟದ ಜಯ ಸಿಕ್ಕಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾನ್ಯ ಮಾಡಿದ್ದು, ಈ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರಿಗೆ ಕ್ಲೀನ್ ಚಿಟ್ ಲಭಿಸಿದಂತಾಗಿದೆ.
ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂ ಮಾಲೀಕ ದೇವರಾಜು ಅವರ ವಿರುದ್ಧದ ತನಿಖೆಯಲ್ಲಿ ಯಾವುದೇ ಬಲವಾದ ಸಾಕ್ಷ್ಯಾಧಾರಗಳು ಲಭ್ಯವಿಲ್ಲ ಎಂದು ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಸುದೀರ್ಘ ವಿಚಾರಣೆಯ ನಂತರ ಪುರಸ್ಕರಿಸಿದ ನ್ಯಾಯಾಲಯ, ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ನೀಡಿದೆ. ಆದರೆ, ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ವಿರುದ್ಧದ ತನಿಖೆಯನ್ನು ಮುಂದುವರಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಈ ಹಿಂದೆ ಲೋಕಾಯುಕ್ತದ ಬಿ ರಿಪೋರ್ಟ್ ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯ ಹೊರತಾಗಿಯೂ, ಸಾಕ್ಷ್ಯಗಳ ಕೊರತೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಈ ಕಾನೂನು ಹೋರಾಟದಲ್ಲಿ ಸದ್ಯಕ್ಕೆ ಗೆಲುವು ಸಿಕ್ಕಿದೆ.



































