
ಮೈಸೂರು: ಸಾಂಸ್ಕೃತಿಕ ನಗರಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಆವರಣದಲ್ಲಿ ಸಂಭ್ರಮದ ವಾತಾವರಣ ಮನೆಮಾಡಿತ್ತು. 2026 ರ ಜನವರಿ 31 ರಂದು ನಡೆದ ವಿಶ್ವವಿದ್ಯಾಲಯದ 21 ನೇ ಘಟಿಕೋತ್ಸವದಲ್ಲಿ ಪ್ರತಿಭಾನ್ವಿತ ಸಾಧಕರಿಗೆ ಗೌರವ ಸಮರ್ಪಿಸಲಾಯಿತು. ಈ ಸಾಲಿನ ಶೈಕ್ಷಣಿಕ ಸಾಧನೆಯಲ್ಲಿ ಉಮೇಶ್ ಭಟ್ ವಾಲ್ಪಾಡಿ ಅವರು ಸಂಸ್ಕೃತ ಸ್ನಾತಕೋತ್ತರ (M.A) ಪದವಿಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ವಿಶ್ವವಿದ್ಯಾಲಯದ ಈ ಪ್ರತಿಷ್ಠಿತ ಸಮಾರಂಭದಲ್ಲಿ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಉಮೇಶ್ ಭಟ್ ಅವರಿಗೆ ಪ್ರಥಮ ರ್ಯಾಂಕ್ ಹಾಗೂ ಚಿನ್ನದ ಪದಕವನ್ನು ಪ್ರದಾನ ಮಾಡಿ ಅಭಿನಂದಿಸಿದರು. ಈ ಮೂಲಕ ಸಂಸ್ಕೃತ ವಿಷಯದಲ್ಲಿ ಇವರು ತೋರಿದ ಅಪ್ರತಿಮ ಪಾಂಡಿತ್ಯಕ್ಕೆ ಸೂಕ್ತ ಗೌರವ ಸಂದಿದೆ.
ವಾಲ್ಪಾಡಿಯ ಉಮೇಶ್ ಭಟ್ ಅವರು ಪಲಿಮಾರು ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಯೋಗದೀಪಿಕಾ ವಿದ್ಯಾಪೀಠದ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಕೇವಲ ಶೈಕ್ಷಣಿಕ ಕ್ಷೇತ್ರದಲ್ಲಷ್ಟೇ ಅಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲೂ ತೊಡಗಿಸಿಕೊಂಡಿರುವ ಇವರು ಶಿರ್ತಾಡಿ ವಾಲ್ಪಾಡಿ ಗ್ರಾಮದ ಅರ್ಜುನಾಪುರ ಮಹಾಲಿಂಗೇಶ್ವರ ದೇವಸ್ಥಾನದ ತಂತ್ರಿಗಳಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಇದರೊಂದಿಗೆ ಜ್ಯೋತಿಷ್ಯ ಮತ್ತು ಪೌರೋಹಿತ್ಯದಲ್ಲೂ ತೊಡಗಿಸಿಕೊಂಡು ಸಮಾಜದ ಧಾರ್ಮಿಕ ಕಾರ್ಯಗಳಿಗೆ ನೆರವಾಗುತ್ತಿದ್ದಾರೆ. ಇವರ ಈ ಬಹುಮುಖೀ ಸಾಧನೆಗೆ ಈಗ ಚಿನ್ನದ ಪದಕದ ಗರಿ ಸೇರ್ಪಡೆಯಾಗಿದೆ.




































