
ಉತ್ತರ ಕನ್ನಡ: ಜನಪದ ಕೋಗಿಲೆ ಎಂದೇ ಪ್ರಸಿದ್ಧರಾಗಿದ್ದ ಪದ್ಮಶ್ರೀ ಮತ್ತು ನಾಡೋಜಾ ಪ್ರಶಸ್ತಿ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಇಂದು ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ 91 ವರ್ಷದ ಸುಕ್ರಿ ಬೊಮ್ಮಗೌಡ ಅವರು ವಯೋಸಹಜ ಕಾಯಿಲೆಯಿಂದಾಗಿ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಹುಟ್ಟಿದ ಸುಕ್ರಿ ಬೊಮ್ಮಗೌಡ ಅವರು ಜನಪದ ಹಾಡುಗಳ ಮೂಲಕ ಹಳ್ಳಿಯ ಸೊಗಡನ್ನು ದಿಲ್ಲಿಗೆ ಕೊಂಡೊಯ್ದ ಕೀರ್ತಿಗೆ ಪಾತ್ರರಾಗಿದ್ದರು. ಅವರು ಹಾಲಕ್ಕಿ ಜನಾಂಗದ ಸಂಸ್ಕೃತಿ ಮತ್ತು ಸಂಗೀತವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಪಡಿಸಿದ್ದರು. ಇದರ ಜೊತೆಗೆ, ಮದ್ಯ ಮುಕ್ತ ಗ್ರಾಮ ಮಾಡುವ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಅವರು ತಮ್ಮ ಊರನ್ನು ಮದ್ಯ ಮುಕ್ತ ಗ್ರಾಮವನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದರು.
ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಲವು ಪ್ರಶಸ್ತಿಗಳನ್ನು ಪಡೆದಿದ್ದ ಸುಕ್ರಿ ಬೊಮ್ಮಗೌಡ ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ತೀವ್ರ ಉಸಿರಾಟ ಸಮಸ್ಯೆಯಿಂದಾಗಿ ಕೆಲವು ದಿನಗಳ ಹಿಂದೆ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಮರಳಿ ಬಂದಿದ್ದರು. ಆದರೆ, ಇಂದು ಮುಂಜಾನೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರು ಇಬ್ಬರು ಮೊಮ್ಮಕ್ಕಳು ಮತ್ತು ಓರ್ವ ಸೊಸೆಯನ್ನು ಅಗಲಿದ್ದಾರೆ. ಇಂದು ಬಡಿಗೇರಿಯಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ.
ಸುಕ್ರಿ ಬೊಮ್ಮಗೌಡ ಅವರ ನಿಧನದಿಂದ ಜನಪದ ಸಂಸ್ಕೃತಿ ಮತ್ತು ಸಂಗೀತ ಕ್ಷೇತ್ರಕ್ಕೆ ಭಾರೀ ನಷ್ಟವಾಗಿದೆ ಎಂದು ಸಮಾಜದ ಹಲವು ಮಂದಿ ವಿಷಾದ ವ್ಯಕ್ತಪಡಿಸಿದ್ದಾರೆ.