
ಬೆಂಗಳೂರು: ನಗರದಿಂದ ರಾಯಚೂರಿಗೆ ಹೊರಟಿದ್ದ ಖಾಸಗಿ ಬಸ್ವೊಂದು ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ್ಲದಿನ್ನೆಯಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ತಡರಾತ್ರಿ 2:30ರ ಸುಮಾರಿಗೆ ಸಂಭವಿಸಿದೆ. ಅದೃಷ್ಟವಶಾತ್, ಬಸ್ನಲ್ಲಿದ್ದ 36 ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಗ್ರೀನ್ ಲೈನ್ ಟ್ರಾವೆಲ್ಸ್ಗೆ ಸೇರಿದ ಈ ಬಸ್ ಬೆಂಗಳೂರು-ಅನಂತಪುರ ಹೈವೇನಲ್ಲಿ ಚಲಿಸುತ್ತಿದ್ದಾಗ, ಟೈರ್ ಬ್ಲಾಸ್ಟ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಬಸ್ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಇತರ ಪ್ರಯಾಣಿಕರೂ ಇದ್ದರು. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬಕ್ಕೆಂದು ಊರಿಗೆ ಹೊರಟಿದ್ದಾಗಲೇ ಈ ದುರಂತ ಸಂಭವಿಸಿದೆ.
ಮಹಿಳೆಯ ಸಮಯಪ್ರಜ್ಞೆಯಿಂದ 36 ಜೀವ ರಕ್ಷಣೆ
ಬಸ್ಸಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದರೂ ಚಾಲಕ ನಿರ್ಲಕ್ಷ್ಯ ವಹಿಸಿದ್ದಾನೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಇದೇ ವೇಳೆ ನಿದ್ರೆ ಮಂಪರಿನಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರಿಗೆ ಎಚ್ಚರವಾಗಿದೆ. ಕೂಡಲೇ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿ ಅವರು ಕಿರುಚಿದ್ದಾರೆ. ಆದಾಗ್ಯೂ ಡ್ರೈವರ್ ಅರ್ಧ ಕಿಮೀ ಬಸ್ ನಿಲ್ಲಿಸದೇ ಹೊರಟಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.
ಬೆಂಕಿಯ ಜ್ವಾಲೆ ಹೆಚ್ಚಾಗುತ್ತಿದ್ದಂತೆ ಪ್ರಯಾಣಿಕರು ತಮ್ಮ ಲಗೇಜ್ಗಳನ್ನೂ ಬಿಟ್ಟು ಬಸ್ನಿಂದ ಜಿಗಿದಿದ್ದಾರೆ. ಹೀಗಾಗಿ, ಪ್ರಯಾಣಿಕರ ಲಗೇಜ್ಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ವಿದ್ಯಾರ್ಥಿಗಳ ಪ್ರಮಾಣ ಪತ್ರ, ದುಬಾರಿ ವಸ್ತುಗಳು ಮತ್ತು ಹಬ್ಬಕ್ಕೆ ಕೊಂಡೊಯ್ಯುತ್ತಿದ್ದ ಸಾಮಗ್ರಿಗಳೆಲ್ಲವೂ ಸುಟ್ಟು ಭಸ್ಮವಾಗಿವೆ.
ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದರೂ, ಮಹತ್ವದ ದಾಖಲೆಗಳು ಮತ್ತು ವಸ್ತುಗಳನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಗ್ರೀನ್ಲೈನ್ ಟ್ರಾವೆಲ್ಸ್ ಮತ್ತು ನಿರ್ಲಕ್ಷ್ಯ ವಹಿಸಿದ ಚಾಲಕನ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.