
ಪಣಜಿ: ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೈವಕ್ಕೆ ಅವಮಾನ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಬಾಲಿವುಡ್ ನಟ ರಣ್ವೀರ್ ಸಿಂಗ್ ಅವರ ವಿರುದ್ಧ ದೂರು ದಾಖಲಾಗಿದೆ.
ಇತ್ತೀಚೆಗೆ ಗೋವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಣ್ವೀರ್ ಸಿಂಗ್ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕುರಿತು ಮೆಚ್ಚುಗೆಯ ಮಾತುಗಳನ್ನಾಡುತ್ತಾ, ನಟ ರಿಷಬ್ ಶೆಟ್ಟಿ ಅವರ ಅಭಿನಯವನ್ನು ಶ್ಲಾಘಿಸಿದ್ದರು. ಈ ವೇಳೆ ಅವರು ಅನುಚಿತ ರೀತಿಯಲ್ಲಿ ದೈವದ ಅನುಕರಣೆ ಮಾಡಿದ್ದರು ಮತ್ತು ದೈವವನ್ನು ‘ದೆವ್ವ’ ಎಂದು ಕರೆದಿದ್ದರು ಎನ್ನಲಾಗಿದೆ.
ರಣ್ವೀರ್ ಸಿಂಗ್ ಅವರ ಈ ವರ್ತನೆಗೆ ತುಳುನಾಡಿನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅನೇಕರು ಅವರು ದೈವದ ಸನ್ನಿಧಿಗೆ ಬಂದು ಕ್ಷಮೆ ಕೇಳಬೇಕೆಂದು ಅಭಿಪ್ರಾಯ ಪಟ್ಟಿದ್ದಾರೆ.
ಹಿಂದು ಜನಜಾಗೃತಿ ಸಮಿತಿಯಿಂದ ದೂರು
ಈ ಹಿನ್ನೆಲೆಯಲ್ಲಿ ಹಿಂದು ಜನಜಾಗೃತಿ ಸಮಿತಿ (ಎಚ್ಜೆಎಸ್)ಯು ರಣ್ವೀರ್ ಸಿಂಗ್ ವಿರುದ್ಧ ಗೋವಾದ ಪಣಜಿಯಲ್ಲಿ ದೂರು ದಾಖಲಿಸಿದೆ. ನಟ ಹಿಂದೂ ಭಾವನೆಗೆ ಧಕ್ಕೆ ತಂದಿದ್ದಾರೆ ಮತ್ತು ಸಾರ್ವಜನಿಕ ಶಾಂತಿಯನ್ನು ಕದಡುವ ಕಾರ್ಯ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಮಿತಿ ಆಗ್ರಹಿಸಿದೆ.
- ದೂರಿನಲ್ಲಿರುವ ಅಂಶ: ‘ಚಾವುಂಡಿ’ ದೈವವು ಭಕ್ತರಿಗೆ ಪೂಜನೀಯವಾಗಿದ್ದು, ತುಳು ಸಮುದಾಯಕ್ಕೆ ಅತ್ಯಂತ ಮಹತ್ವದ ದೈವವಾಗಿದೆ. ಆದರೆ ದೈವವನ್ನು ಕೆಟ್ಟ ರೀತಿಯಲ್ಲಿ ರಣ್ವೀರ್ ಅನುಕರಣೆ ಮಾಡಿದ್ದಾರೆ. ಈ ಬಗ್ಗೆ ತನಿಖೆಯನ್ನು ನಡೆಸಿ, ನಟನ ವಿಚಾರಣೆ ನಡೆಸಿ, ಕಾನೂನು ರೀತ್ಯ ಕ್ರಮ ಜರುಗಿಸಬೇಕೆಂದು ಎಚ್ಜೆಎಸ್ ಒತ್ತಾಯಿಸಿದೆ.



































