
ಬೆಂಗಳೂರು: ಕಾರ್ಕಳ ಮೂಲದ ಹಿರಿಯ ಕಾಂಗ್ರೆಸ್ ಕಾರ್ಯಕರ್ತ ರವಿಶಂಕರ ಶೇರಿಗಾರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯ ಮೇರೆಗೆ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಸ್. ಮಧುಬಂಗಾರಪ್ಪ ಅವರು ಈ ನೇಮಕ ಮಾಡಿದ್ದಾರೆ.
25 ವರ್ಷಗಳ ಪಕ್ಷ ನಿಷ್ಠೆ
ರವಿಶಂಕರ ಶೇರಿಗಾರ್ ಅವರು ಕಳೆದ 25 ವರ್ಷಗಳಿಂದ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ಇದಲ್ಲದೆ, ಅವರು 2013 ರಿಂದ 2018 ರವರೆಗೆ ಭಾರತೀಯ ನೈರುತ್ಯ ರೈಲ್ವೆಯ ಸಲಹಾ ಸಮಿತಿ ಸದಸ್ಯರಾಗಿಯೂ, 2017 ರ ಗೋವಾ ರಾಜ್ಯದ ಪೋಂಡ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಎಐಸಿಸಿಯಿಂದ ನೇಮಕಗೊಂಡಿದ್ದ ಅವರು, ಆ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಮಾಜಿಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ನಿರ್ದೇಶನದಂತೆ, ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್ ಶಿಫಾರಸ್ಸಿನಂತೆ, ಮುಖಂಡರುಗಳಾದ ಉದಯ ಶೆಟ್ಟಿ ಮುನಿಯಲು, ಮಂಜುನಾಥ್ ಪೂಜಾರಿ ಮುದ್ರಾಡಿ ಸಹಕಾರದಂತೆ ಆಯ್ಕೆ ಪ್ರಕ್ರಿಯೆ ನಡೆದಿದೆ.



































